ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸ್ವಂತ ಖರ್ಚಿನಲ್ಲಿ ನಗರದ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಶುಕ್ರವಾರ ಆರಂಭಿಸಿದರು.
ನಗರದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎರಡನೇ ಡೋಸ್ ಲಸಿಕೆ ಪಡೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ದುರ್ಗಾಂಬಿಕಾ ದೇವಸ್ಥಾನದದ ದಾಸೋಹ ಸಭಾಂಗಣದಲ್ಲಿ ಲಸಿಕೆ ಪಡೆಯಲು ನೂರಾರು ಜನರು ಸಾಲುಗಟ್ಟಿ ನಿಂತಿದ್ದರು. ನಗರದ ಐದು ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಲಾಗಿದೆ.
‘ಈಗಾಗಲೇ 10 ಸಾವಿರ ಡೋಸ್ ಕೋವಿಶೀಲ್ಡ್ ಬಂದಿದ್ದು, ಜೂನ್ 10ರಂದು 50 ಸಾವಿರ ಡೋಸ್ ನೀಡುವುದಾಗಿ ಕಂಪನಿ ಭರವಸೆ ನೀಡಿದೆ. ₹ 4 ಕೋಟಿಯನ್ನು ಕಂಪನಿಗೆ ಪಾವತಿಸಲಾಗಿದೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದರು.