ದಾವಣಗೆರೆ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸಿಪಿಐ(ಎಂ) ಕಚೇರಿಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಸದಸ್ಯರು ಇಲ್ಲಿನ ಗಾಂಧಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಪಕ್ಷದ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶ ಮಾಡಿದ್ದನ್ನು ವಿರೋಧಿಸಿ, ಆರ್ಎಸ್ಎಸ್ ಕಾರ್ಯಕರ್ತರು ಸಿಪಿಐ (ಎಂ) ಕಚೇರಿಗೆ ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಿದರು.
ಸರ್ವರಿಗೂ ಸಮಪಾಲು, ಸಮಬಾಳು ಎಂಬ ತತ್ವದಡಿ ಕಾರ್ಯನಿರ್ವಹಿಸುವ ಕಮ್ಯುನಿಸ್ಟ್ ಪಕ್ಷವು ಮಹಿಳೆಯರ ಹಕ್ಕಿಗಾಗಿ ಹೋರಾಟಕ್ಕಿಳಿದಿದೆ. ಮಹಿಳೆಯರ ಹಕ್ಕುಗಳಿಗೆ ಚ್ಯುತಿ ಬಂದಲ್ಲಿ, ಅದನ್ನು ಕಮ್ಯುನಿಸ್ಟ್ ಪಕ್ಷ ಖಂಡಿಸುತ್ತದೆ. ಶಬರಿಮಲೆಗೆ ಮಹಿಳೆಯರ ಪ್ರವೇಶವಕ್ಕೆ ಅವಕಾಶ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪಿಗೆ ಬಿಜೆಪಿಯ ವಿರೋಧವಿದೆ. ಆರ್ಎಸ್ಎಸ್ ಸಿದ್ಧಾಂತದಂತೆ ಮಹಿಳೆಯರು, ದಲಿತರನ್ನು ನಿರ್ಲಕ್ಷ್ಯಿಸಿ ಮನುವಾದದಡಿ ರಾಷ್ಟ್ರ ಕಟ್ಟಬೇಕೆಂಬ ಮನೋಭಾವ ಬಿಜೆಪಿಗೆ, ಆರ್ಎಸ್ಎಸ್ಗೆ ಇದೆ. ಹೀಗಾಗಿ, ಮತ್ತೊಂದು ಪಕ್ಷದ ಕಚೇರಿಗೆ ಬೆಂಕಿ ಹಚ್ಚಯವ ಹೇಡಿತನದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಸಿಪಿಐ(ಎಂ) ಕಚೇರಿ ಬೆಂಕಿ ಹಚ್ಚಿರುವ ಆರೋಪಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಎಚ್.ಜಿ. ಉಮೇಶ್, ಐರಣಿ ಚಂದ್ರು, ಆವರಗೆರೆ ಚಂದ್ರು, ಆವರಗೆರೆ ವಾಸು, ವಿಶಾಲಕ್ಷಮ್ಮ, ಮೃತ್ಯುಂಜಯ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.