ದಾವಣಗೆರೆ: ಕಲಾವಿದರನ್ನು ಪ್ರೋತ್ಸಾಹಿಸಿ, ಕಲೆಯನ್ನು ಉಳಿಸುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶಯವಾಗಿದ್ದು, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಮುಖ್ಯವಾಹಿನಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದರು.
ಮುರಾರ್ಜಿ ಕಲಾ ಬಳಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಲವು ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಗಳು ಸಿಗದೇ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ನಮ್ಮ ಇಲಾಖೆಯ ಮೂಲಕ ಜನಪರ ಉತ್ಸವ, ಗಿರಿಜನ ಉತ್ಸವ, ಮಹಿಳಾ ಉತ್ಸವ, ‘ಯುವ ಸೌರಭ’ ಹಾಗೂ ಮಕ್ಕಳಿಗೆ ಚಿಗುರು ಕಾರ್ಯಕ್ರಮದ ಮೂಲಕ ಎಲ್ಲಾ ಸಮುದಾಯಗಳ ಮತ್ತು ಎಲ್ಲಾ ವಯೋಮಾನದವರಿಗೆ ಅವಕಾಶ ನೀಡಲಾಗುತ್ತಿದೆ’ ಎಂದರು.
‘ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ತೆಗೆಯಲು ಸಹಕಾರಿಯಾಗುವುದು. ವಿದ್ಯಾರ್ಥಿನಿಯರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಪ್ರಾಂಶುಪಾಲ ಟಿ.ಎ. ಕುಸಗಟ್ಟಿ ತಿಳಿಸಿದರು.
ಉಪನ್ಯಾಸಕ ಫಾಲಾಕ್ಷ ಮಾತನಾಡಿದರು. ಉಪ ಪ್ರಾಚಾರ್ಯ ಎ.ಆರ್. ಮಂಜಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಆಲೂರು ನಿಂಗರಾಜ್, ಕಲಾವಿದರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಒ.ಮುರಾರ್ಜಿ, ಎಸ್ಡಿಎಂಸಿ ಅಧ್ಯಕ್ಷ ಕುಬೇರಪ್ಪ, ಸದಸ್ಯ ವಸಂತ ರಾಟೆ, ಯುವ ಮುಖಂಡ ಮೋಹನ್, ಶರಣ ಸಾಹಿತ್ಯ ಪರಿಷತ್ತು ನಿರ್ದೇಶಕಿ ಚಂದ್ರಿಕಾ ನೇರಲಗುಂಡಿ ಇದ್ದರು.
ಕಲಾವಿದರು ವಚನ, ಭಾವಗೀತೆಗಳು, ಜಾನಪದ ಗೀತೆಗಳ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಕಲಾವಿದ ಮಾರುತಿ ಪ್ರಾರ್ಥಿಸಿದರು. ಮಂಜುನಾಥ್ ಸ್ವಾಗತಿಸಿ, ಗ್ರಂಥ ಪಾಲಕಿ ಅನ್ನಪೂರ್ಣ ಪಾಟೀಲ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.