ದಾವಣಗೆರೆ: ಬಾಕಿ ಇರುವ 16 ತಿಂಗಳ ಶಿಷ್ಯವೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಇಲ್ಲಿನ ಜೆ.ಜೆ.ಎಂ. ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕಚೇರಿ ಗೇಟಿಗೆ ಬೀಗ ಹಾಕಿ ಪೊಲೀಸರು ತಡೆಯೊಡ್ಡಿದ್ದಾರೆ.
16 ದಿವಸಗಳಿಂದ ಇಲ್ಲಿನ ಜಯದೇವ ವೃತ್ತದಲ್ಲಿ ನಡೆಸುತ್ತಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರನ್ನು ಭೇಟಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದರು.
ಜಿಲ್ಲಾಧಿಕಾರಿ ಅವರು ಹೊನ್ನಾಳಿಯ ಕಾರ್ಯಕ್ರಮದಲ್ಲಿ ಇದ್ದುದರಿಂದ ಅವರು ಬರುವವರೆಗೂ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲುಗಳ ಮುಂದೆ ಕಾದು ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಇಲ್ಲಿ ಕುಳಿತುಕೊಳ್ಳುವ ಹಾಗಿಲ್ಲ ಎಂದು ಆಕ್ಷೇಪಿಸಿದರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸುವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಈ ವೇಳೆ ವಿದ್ಯಾರ್ಥಿಗಳ ಇನ್ನೊಂದು ಗುಂಪು ಪ್ರವೇಶಿಸಲು ಮುಂದಾದಾಗ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಗೇಟಿಗೆ ಬೀಗ ಹಾಕಿ ನಿರ್ಬಂಧ ವಿಧಿಸಿದರು.