ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆಗೆ ಟಿಕೆಟ್ ಸಿಗದಿದ್ದರೆ ಪಲಾಯನ ಮಾಡಲ್ಲ: ಜಿ.ಬಿ. ವಿನಯ್‍ಕುಮಾರ್

ಹೊನ್ನಾಳಿ ತಾಲ್ಲೂಕಿನಲ್ಲಿ ವಿನಯ ನಡಿಗೆ ಹಳ್ಳಿಯ ಕಡೆಗೆ ಪಾದಯಾತ್ರೆ ಆರಂಭ
Published 2 ಜನವರಿ 2024, 14:30 IST
Last Updated 2 ಜನವರಿ 2024, 14:30 IST
ಅಕ್ಷರ ಗಾತ್ರ

ಹೊನ್ನಾಳಿ: ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆಯಲಷ್ಟೇ ಪಾದಯಾತ್ರೆ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು, ಯುವಕರನ್ನು ರಾಜಕೀಯದತ್ತ ಸೆಳೆಯುವುದು ಹಾಗೂ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್‍ಕುಮಾರ್ ತಿಳಿಸಿದರು.

ತಾಲ್ಲೂಕಿನ ಗಡಿಭಾಗವಾದ ಕೋಣನತಲೆ ಗ್ರಾಮದಲ್ಲಿ ಮಂಗಳವಾರ ಪಾದಯಾತ್ರೆ ಆರಂಭಿಸುವ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಯಾಗಿ ಜನರ ನಡುವೆ ಬೆರೆಯುವುದರಿಂದ ಅವರ ಮನದಿಂಗಿತವನ್ನು ಅರಿಯಬಹುದಾಗಿದೆ. ಜಗಳೂರು ತಾಲ್ಲೂಕಿನ ಚಿಕ್ಕ ಉಜ್ಜಯಿನಿಯಿಂದ ಪಾದಯಾತ್ರೆ ಪ್ರಾರಂಭಿಸಿ ಅಲ್ಲಿ 5 ದಿನ, ಹರಪನಹಳ್ಳಿ ತಾಲ್ಲೂಕಿನಲ್ಲಿ 3 ದಿನ ಹಾಗೂ ಹರಿಹರ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಸತತವಾಗಿ 98 ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ಒಟ್ಟು 280 ಕಿ.ಮೀ. ಪಾದಯಾತ್ರೆ ಕೈಗೊಂಡಿದ್ದೇನೆ’ ಎಂದು ಹೇಳಿದರು.

ದಿಢೀರ್ ರಾಜಕೀಯ ಪ್ರವೇಶ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ರಾಹುಲ್‍ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ನನಗೆ ಪ್ರೇರಣೆ ಹಾಗೂ ಸ್ಫೂರ್ತಿ ನೀಡಿದೆ. ಜನ ಸಮಾನ್ಯರ ಧ್ವನಿಯಾಗಿ ಕೆಲಸ ಮಾಡುವ ಉದ್ದೇಶವಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಸಲಹೆ ಸೂಚನೆಗಳನ್ನು ಕೊಡುವ ಕೆಲಸವನ್ನೂ ಮಾಡುತ್ತಿದ್ದೇನೆ’ ಎಂದು ಉತ್ತರಿಸಿದರು.

ಸ್ಥಳೀಯ ಮಟ್ಟದಲ್ಲಿ ನಾಯಕತ್ವ ಬೆಳೆಸುವ ಅಗತ್ಯವಿದೆ. ಈ ಹಿಂದೆ ಜಿಲ್ಲೆಯಲ್ಲಿ ಯಾರೂ ಇಂತಹ ಕಾರ್ಯಕ್ರಮ ಮಾಡಿಲ್. ಪಾದಯಾತ್ರೆ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ಪ್ರತಿ ಗ್ರಾಮದಲ್ಲೂ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಈ ಬಾರಿ ಕ್ಷೇತ್ರದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಜಿಲ್ಲೆಯಲ್ಲಿ ಹೊಸಮುಖಕ್ಕಾಗಿ ಜನರು ಹಂಬಲಿಸುತ್ತಿದ್ದಾರೆ. ಕಾಂಗ್ರೆಸ್ ವರಿಷ್ಠರು ನನಗೆ ಟಿಕೆಟ್ ಕೊಡುತ್ತಾರೆ ಎಂಬ ಅಚಲ ವಿಶ್ವಾಸವಿದೆ. ಒಂದು ವೇಳೆ ಟಿಕೆಟ್ ಕೊಡದಿದ್ದರೂ ಪಲಾಯನ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕಾರಣದಲ್ಲಿ ಸಮಯ ಜಾಸ್ತಿ ಖರ್ಚು ಮಾಡಿದರೆ, ದುಡ್ಡು ಕಡಿಮೆ ಖರ್ಚಾಗುತ್ತೆ ಎಂದು ಪಕ್ಷದ ಹಿರಿಯರು ಹೇಳಿದ್ದಾರೆ. ನಾನು ಸಮಯ ಖರ್ಚು ಮಾಡಲು ಇಷ್ಟಪಡುತ್ತೇನೆ ಎಂದರು.

ಕಾಂಗ್ರೆಸ್ ಮುಖಂಡರಾದ ಬಿ.ಸಿದ್ದಪ್ಪ, ಎಚ್.ಎ. ಉಮಾಪತಿ ಮಾತನಾಡಿದರು. ಹಿರೇಗೋಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ವಿ.ನಾಗಪ್ಪ, ಸದಸ್ಯ ನಾಗೇಂದ್ರಪ್ಪ, ಗ್ರಾಮದ ಮುಖಂಡರಾದ ಶಿವಮೂರ್ತಪ್ಪ, ಪರಮೇಶ್ವರಪ್ಪ, ಕರಿಯಪ್ಪ, ಸುಭಾಶ್, ಕರವೇ ಅಧ್ಯಕ್ಷ ಎಸ್.ಶ್ರೀನಿವಾಸ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ಎ. ರಂಜಿತ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT