ದಾವಣಗೆರೆ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನಿರಂತರ ಸುರಿಯುತ್ತಿರುವ ಮಳೆಯಿಂದ ಗೋಡೆ ಕುಸಿದು ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಒಂದು ವರ್ಷ ಐದು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ.
ತುಂಗಾಭದ್ರ ನದಿ ನೀರಿನ ಹರಿವು ಹೆಚ್ಚಳವಾದ ಹಿನ್ನೆಯಲ್ಲಿ ಉಕ್ಕಡಗಾತ್ರಿ– ಪತ್ಯಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಳೆಹಾನಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಜುಲೈ 23ರಂದು 11.4 ಮಿ.ಮೀ. ಸರಾಸರಿ ಮಳೆಯಾಗಿದ್ದು, ₹ 11.38 ಲಕ್ಷ ನಷ್ಟ ಸಂಭವಿಸಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 9 ಮನೆಗಳು ಭಾಗಶಃ ಹಾನಿಯಾಗಿದ್ದು ₹ 2.70 ಲಕ್ಷ ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಪೂರ್ಣ ಹಾನಿಯಾಗಿದ್ದು, ₹2 ಸಾವಿರ ಹಾಗೂ 1 ಮನೆಗೆ ಭಾಗಶಃ ಹಾನಿಯಾಗಿದ್ದು, ₹30,000 ಹಾನಿಯಾಗಿದೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದ್ದು ₹13,000 ಅಂದಾಜು ನಷ್ಟ ಸಂಭವಿಸಿದೆ.
ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿದ್ದು ₹25,000, ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ ಒಂದು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ತಲಾ ₹40,000 ನಷ್ಟ ಸಂಭವಿಸಿದೆ.
ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು;ವಾಡಿಕೆ ಮಳೆ;ಬಿದ್ದ ಮಳೆ(ಮಿ.ಮೀಗಳಲ್ಲಿ)
ಚನ್ನಗಿರಿ;7.1;14.8
ದಾವಣಗೆರೆ;1.5; 6
ಹರಿಹರ;1.9;4.4
ಹೊನ್ನಾಳಿ;3.8;10.8
ಜಗಳೂರು; 2.3;12.7
ನ್ಯಾಮತಿ;5.7;20.4
ಬೆಳೆ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮಗಳು
ದಾವಣಗೆರೆ: ಜಿಲ್ಲೆಯ ಮುಂಗಾರು ಹಂಗಾಮಿನ ಮಳೆಯಾಶ್ರಿತ ಪ್ರದೇಶದಲ್ಲಿ ಈಗಾಗಲೇ ವಿವಿಧ ಬೆಳೆಗಳ ಬಿತ್ತನೆಯಾಗಿದ್ದು ಕಳೆದ ಒಂದು ವಾರದಿಂದ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಜಮೀನಿನಲ್ಲಿ ನೀರು ನಿಲ್ಲುವಂತಹ ಕಡೆಗಳಲ್ಲಿ ಬೆಳೆಗಳಿಗೆ ಶೀತದ ಅಡ್ಡ ಪರಿಣಾಮಗಳು ಕಂಡು ಬರುತ್ತಿವೆ. ರೈತರು ಬೆಳೆಗಳನ್ನು ರಕ್ಷಿಸಲು ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಸಲಹೆ ನೀಡಿದ್ದಾರೆ.
* ಜಿಲ್ಲೆಯಲ್ಲಿ ಮೆಕ್ಕೆಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೀತದ ಪರಿಣಾಮ ಬೆಳೆ ಬಿಳಿಚಾಗುವುದು ಹಾಗೂ ಕ್ಯಾದಿಗೆ ರೋಗದ ತರಹದ ಲಕ್ಷಣಗಳು ಕಂಡು ಬಂದಲ್ಲಿ ಜಮೀನಿನಲ್ಲಿ ನೀರು ಬಸಿದು ಹೋಗುವಂತೆ ನೀರಿನ ದಾರಿ ಕಲ್ಪಿಸುವುದು. ದಪ್ಪವಾಗಿ ಬಿತ್ತನೆಯಾದ ಕಡೆಗಳಲ್ಲಿ ಕನಿಷ್ಠ 8 ಅಂಗುಲ ಅಂತರ ಕಾಯ್ದುಕೊಳ್ಳಲು ಸಸಿಗಳನ್ನು ಕಿತ್ತು ಎಡೆ ಹೊಡೆದು ಬೆಳೆ ಸಾಲುಗಳಿಗೆ ದಿಂಡು ಏರಿಸಬೇಕು.
*ಮೆಕ್ಕೆಜೋಳ 30 ದಿವಸದ ಬೆಳೆಗೆ 10ರಿಂದ 15 ಕೆಜಿ ಯೂರಿಯಾ ಮೇಲುಗೊಬ್ಬರ ಕೊಡಬಹುದು. ಶೀತಬಾಧೆಯಿಂದ ಬೇಗ ಚೇತರಿಸಿಕೊಳ್ಳಲು 3 ಗ್ರಾಂ ನೀರಿನಲ್ಲಿ ಸಾರಜನಕ: ರಂಜಕ: ಪೊಟ್ಯಾಷ್ (19:19:19 / 18:18:18) ಮತ್ತು 3 ಮಿ.ಲೀ ಲಘು ಪೋಷಕಾಂಶ ದ್ರಾವಣವನ್ನು ಪ್ರತೀ ಲೀಟರ್ ನೀರಿಗೆ ಬೆರೆಸಿ ಬೆಳೆಗೆ ಸಿಂಪಡಿಸಬೇಕು.
* ಬಾರಿ ಮಳೆ ಹಾಗೂ ಬಿಸಿಲು ವಾತಾವರಣದಿಂದ ಶೇಂಗಾ ಬೆಳೆಗೆ ಕೊಳೆ ರೋಗ ಬಂದು ಗಿಡಗಳು ಬಾಡುತ್ತಿದ್ದು ಹತೋಟಿಗಾಗಿ 2 ಗ್ರಾಂ. ಕಾರ್ಬನ್ ಡೇಜಿಂ ಅನ್ನು ಪ್ರತೀ ಲೀಟರ್ ನೀರಿಗೆ ಬೆರೆಸಿ ಬೆಳೆಗಳ ಬುಡಕ್ಕೆ ಸುರಿಯಬೇಕು. ಶೇಂಗಾ ಬಿತ್ತುವಾಗ ಜಿಪ್ಸಂ ಹಾಕಿಲ್ಲದಿದ್ದಲ್ಲಿ 30 ದಿನದೊಳಗಾಗಿ 2 ಕ್ವಿಂಟಲ್ ಜಿಪ್ಸಂನ್ನು ಪ್ರತೀ ಎಕರೆಗೆ ಮಣ್ಣಿನಲ್ಲಿ ಬೆರೆಸಿ ಎಡೆ ಹೊಡೆದು ದಿಂಡು ಏರಿಸಬೇಕು.
*ತೊಗರಿ ಬೆಳೆಯಲ್ಲಿ ನೀರು ನಿಲ್ಲದಂತೆ ಬಸಿದು ತೆಗೆಯಬೇಕು. ಇಲ್ಲದಿದ್ದಲ್ಲಿ ಸಿಡಿ ರೋಗ ಬರುವ ಸಾಧ್ಯತೆ ಇರುತ್ತದೆ. ಸಿಡಿ ರೋಗ ಬಾಧಿತ ಒಣಗಿದ ಗಿಡಗಳನ್ನು ಕಿತ್ತು ನಾಶಪಡಿಸಬೇಕು. ಮುನ್ನೆಚ್ಚರಿಕೆಯಾಗಿ ಇತರೆ ಪ್ರದೇಶಕ್ಕೆ ರೋಗ ಹರಡದಂತೆ 1ಗ್ರಾಂ. ಕಾರ್ಬನ್ಡೇಜಿಂ ಪ್ರತೀ ಲೀಟರಿಗೆ ಬೆರೆಸಿ ರೋಗ ಪೀಡಿತ ಪ್ರದೇಶ ನೆನೆಯುವಂತೆ ಸುರಿಯಬೇಕು.
*ಹತ್ತಿ ಬೆಳೆಯಲ್ಲಿ ಸತತವಾಗಿ ಬರುವ ಜಿಟಿಜಿಟಿ ಮಳೆಯಿಂದ ಕರಿ ಹೇನು ಬಾಧೆ ಕಂಡು ಬಂದಲ್ಲಿ ಹತೋಟಿಗೆ ಒಂದು ಮಿ.ಲೀಟರ್ ಅಸಿಟಮಿಪ್ರಿಡ್ ಅನ್ನು 3 ಲೀಟರ್ ನೀರಿಗೆ ಅಥವಾ ಒಂದು ಮಿಲೀ ಇಮಿಡಕ್ಲೋಪ್ರಿಡ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಯ ಮೇಲೆ ಚೆನ್ನಾಗಿ ಸಿಂಪಡಿಸಬೇಕು. ಜಮೀನಿನಲ್ಲಿ ನೀರು ನಿಲ್ಲದಂತೆ ಬಸಿದು ತೆಗೆಯಬೇಕು. ಶೀತ ಬಾಧೆಯಿಂದ ಎಲೆ ಕೆಂಪಾಗುವುದು ಕಂಡು ಬಂದಲ್ಲಿ ಶೇ 2ರಷ್ಟು ಡಿಎಪಿ ರಸಗೊಬ್ಬರದ ದ್ರಾವಣವನ್ನು (100 ಲೀಟರ್ ನೀರಿನಲ್ಲಿ 2 ಕೆಜಿ ಡಿಎಪಿ ಚೆನ್ನಾಗಿ ಕರಗಿಸಿ ಒಂದು ರಾತ್ರಿ ಬಿಟ್ಟು ಮೇಲಿನ ತಿಳಿ) ಪ್ರತೀ ಎಕರೆಗೆ 200 ಲೀಟರ್ನಂತೆ ಬೆಳೆಗೆ ಸಿಂಪರಿಸಬೇಕು. ಬೆಳೆಯಲ್ಲಿ ಎಡೆ ಹೊಡೆದು ಸಾಲುಗಳಿಗೆ ದಿಂಡು ಏರಿಸಬೇಕು. ಎಲ್ಲಾ ಬೆಳೆಗಳ ಬಿತ್ತನೆ ಕಾಲಕ್ಕೆ ಜಿಪ್ಸಂ ಜಿಂಕ್ ಬೋರಾನ್ ನೀಡಿಲ್ಲದಿದ್ದರೆ 30 ದಿವಸದೊಳಗಾಗಿ ಪ್ರತಿ ಎಕರೆಗೆ 1 ಕ್ವಿಂಟಲ್ ಜಿಪ್ಸಂ 5 ಕೆಜಿ ಜಿಂಕ್ ಮತ್ತು 2 ಕೆಜಿ ಬೋರಾನ್ ಪೋಷಕಾಂಶಗಳನ್ನು ಒದಗಿಸಿ ಎಡೆ ಹೊಡೆದು ಸಾಲುಗಳಿಗೆ ದಿಂಡು ಏರಿಸಿ ಬದುಗಳನ್ನು ಸ್ವಚ್ಛಗೊಳಿಸಿ ಕಳೆ ಮುಕ್ತವಾಗಿರಿಸಿದಲ್ಲಿ ಕೀಟ ರೋಗ ಬಾಧೆ ಕಡಿಮೆಯಾಗುತ್ತದೆ. ‘ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಲಘು ಪೋಷಕಾಂಶ ಮಿಶ್ರಣಗಳು ರೈತರಿಗೆ ರಿಯಾಯಿತಿ ದರದಲ್ಲಿ ಲಭ್ಯವಿದೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.