ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ ಕ್ಷೇತ್ರ: ಮುಖ್ಯಮಂತ್ರಿಯಿಂದ ಬಂಡಾಯ ಶಮನ?

ಎರಡು ದಿನಗಳಲ್ಲಿ ನಿರ್ಧಾರ ಪ್ರಕಟ: ಜಿ.ಬಿ.ವಿನಯ್‌ಕುಮಾರ್
Published 8 ಏಪ್ರಿಲ್ 2024, 5:55 IST
Last Updated 8 ಏಪ್ರಿಲ್ 2024, 5:55 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ಇನ್‌ಸೈಟ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್‌ಕುಮಾರ್ ಜೊತೆ ಮಾತುಕತೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಂಡಾಯ ಶಮನಗೊಳಿಸಲು ಮುಂದಾಗಿದ್ದಾರೆ. ಆದರೆ, ಎರಡು ದಿನಗಳಲ್ಲಿ ನಿರ್ಧಾರ ಘೋಷಿಸುವುದಾಗಿ ವಿನಯ್‌ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಗಳ ಸಮ್ಮುಖದಲ್ಲಿ ಭಾನುವಾರ ಮಾತುಕತೆ ನಡೆಯಿತು. ಈ ವೇಳೆ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಬಿಡುವಂತೆ ವಿನಯ್‌ಕುಮಾರ್‌ಗೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಹರಿಹರದ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಇದ್ದರು.

ಕಾಂಗ್ರೆಸ್‌ನಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಜಿ.ಬಿ. ವಿನಯ್‌ಕುಮಾರ್ ಟಿಕೆಟ್‌ ಘೋಷಣೆಗೂ ಮೊದಲೇ ಗ್ರಾಮಗಳಲ್ಲಿ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆಯಾದ ಬಳಿಕವೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಂಬಂಧ ಜನಾಭಿಪ್ರಾಯ ಸಂಗ್ರಹಿಸುತ್ತಿರುವ ಅವರು, 13 ದಿನಗಳಲ್ಲಿ ಸುಮಾರು 135 ಹಳ್ಳಿಗಳನ್ನು ಸುತ್ತಿದ್ದಾರೆ.

‘ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವುದು ಕಷ್ಟ. ಮುಂದೆ ಅವಕಾಶಗಳು ಇದ್ದು, ನಿಮ್ಮನ್ನು ಬೆಳೆಸುತ್ತೇವೆ. ಸ್ಪರ್ಧಿಸುವ ಇಚ್ಛೆ ಇದ್ದರೆ ಸ್ಪರ್ಧಿಸಿ, ನಿಮ್ಮ ವಿವೇಚನಗೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಹೇಳಿದರು. ನಾನು ಸ್ಪರ್ಧಿಸಬೇಕು ಎಂದು ಲಕ್ಷಾಂತರ ಜನರು ಬಯಸುತ್ತಿದ್ದಾರೆ. ಸ್ಪರ್ಧಿಸಿದರೆ ಗೆಲ್ಲುವ ಅವಕಾಶವಿದೆ. ಟಿಕೆಟ್ ಬದಲಾವಣೆ ಮಾಡಿ ನನಗೆ ಅವಕಾಶ ನೀಡಿ ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ’ ಎಂದು ವಿನಯ್‌ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ನಮ್ಮ ಜೊತೆ ಸೇರಿಕೊಂಡು ಕೆಲಸ ಮಾಡಿ, ನಿಮಗೆ ಮುಂದೆ ಭವಿಷ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್ ಕೂಡಾ ಮನವಿ ಮಾಡಿದರು. ಆದರೆ, ಎರಡು ದಿನ ಕಾಲವಕಾಶ ನೀಡುವಂತೆ ಅವರಿಗೆ ಹೇಳಿದ್ದೇನೆ’ ಎಂದು ವಿನಯ್‌ಕುಮಾರ್ ತಿಳಿಸಿದರು.

ಎರಡು ಕ್ಷೇತ್ರಗಳ ಜನರ ಅಭಿಪ್ರಾಯ ಪಡೆದು ಏ.9ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ. ಬಂಡಾಯ ಶಮನವಾಯಿತು ಎಂದು ಅಂದುಕೊಳ್ಳಬೇಡಿ.
-ಜಿ.ಬಿ.ವಿನಯ್‌ಕುಮಾರ್ ಕಾಂಗ್ರೆಸ್ ಆಕಾಂಕ್ಷಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT