ದಾವಣಗೆರೆ: ರಾಜ್ಯಪಾಲ ಥಾವರಚಂದ ಗೆಹಲೋತ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ದಾವಣಗೆರೆ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಜಾನಪದ ತಜ್ಞ ಡಾ. ಮೀರಾಸಾಬಿಹಳ್ಳಿ ಶಿವಣ್ಣ, ಇತಿಹಾಸಕಾರ ಡಾ.ಲಕ್ಷ್ಮಣ ತೆಲಗಾವಿ ಹಾಗೂ ತಪೋವನ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಅಧ್ಯಕ್ಷ ಶಶಿಕುಮಾರ ವಿ.ಎಂ. ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಒಟ್ಟು 44 ವಿದ್ಯಾರ್ಥಿಗಳಿಗೆ ಒಟ್ಟು 79 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಎಂಬಿಎ ವಿಭಾಗದ ಸ್ವಪ್ನ ಎಸ್.ಎಂ. ಐದು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ವಿಶ್ವವಿದ್ಯಾಲಯದ ಚಿನ್ನದ ಹುಡುಗಿಯಾಗಿ ಹೊರಹೊಮ್ಮಿದರು.
ಐದು ಜನರಿಗೆ ಎಂ.ಫಿಲ್, ಆರು ಜನರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಒಟ್ಟು 11,114 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಹಾಗೂ 12,726 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ರಾಜ್ಯಪಾಲರು ಘಟಿಕೋತ್ಸವದಲ್ಲಿ ಘೋಷಿಸಿದರು.
ಒಡಿಶ್ಶಾದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಾಧಿಪತಿ ಡಾ.ಪಿ.ವಿ. ಕೃಷ್ಣ ಭಟ್ ಅವರು ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಡಾ.ಶರಣಪ್ಪ ವಿ.ಹಲಸೆ ಅವರು ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವಾಚಿಸಿದರು.
ಕುಲಸಚಿವರಾದ ಡಾ.ಗಿಯತ್ರಿ ದೇವರಾಜ್, ಪರೀಕ್ಷಾಂಗ ಕುಲಸಚಿವರಾದ ಡಾ.ಎಚ್.ಎಸ್. ಅನಿತಾ, ಸಿಂಡಿಕೇಟ್ ಹಾಗೂ ವಿದ್ಯಾ ವಿಷಯಕ ಪರಿಷತ್ ಸದಸ್ಯರು ಹಾಗೂ ಡೀನ್ಗಳು ಹಾಜರಿದ್ದರು.