ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಹಲವು ಸೌಲಭ್ಯಗಳನ್ನು ನೀಡಿವೆ. ಅವುಗಳನ್ನು ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಎಸ್ಟಿ ಮೋರ್ಚಾ, ಮಂಡಲ ಎಸ್ಟಿ ಮೋರ್ಚಾ ಪದಾಧಿಕಾರಿಗಳ ಸಂಘಟನಾತ್ಮಕ ಸಭೆ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೇಕಾರ ಮಾತನಾಡಿ, ‘ಪದಾಧಿಕಾರಿಗಳು ವಿಸಿಟಿಂಗ್ ಕಾರ್ಡ್ ಮಾಡಿಸಿಕೊಂಡು ಓಡಾಡಿದರೆ ಪಕ್ಷ ಸಂಘಟನೆ ಆಗುವುದಿಲ್ಲ. ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲತೆ ಪ್ರದರ್ಶಿಸಬೇಕು’ ಎಂದು ಸಲಹೆ ನೀಡಿದರು.
ಮೋರ್ಚಾದ ಜಿಲ್ಲಾ ಮಾಜಿ ಅಧ್ಯಕ್ಷ ಲೋಕೇಶಕುಮಾರ್, ‘ವಾಲ್ಮೀಕಿ ಸಮುದಾಯದವರಿಗೆ ಉಪಮುಖ್ಯಮಂತ್ರಿ ಸ್ಥಾನ ಮತ್ತು ಸಮಾಜದ ಪ್ರಮುಖ ಬೇಡಿಕೆಯಾದ 7.5 ಮೀಸಲಾತಿ ಕೊಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ್ದರು. ಈ ಬಗ್ಗೆ ಮೋರ್ಚಾದ ರಾಜ್ಯಾಧ್ಯಕ್ಷರು ವರಿಷ್ಠರ ಮೇಲೆ ಒತ್ತಡ ಹೇರಬೇಕು. ಜಿಲ್ಲೆಯಲ್ಲಿ ಎಸ್ಟಿ ಸಮುದಾಯದವರಿಗೆ ನಿಗಮ-ಮಂಡಳಿಯಲ್ಲಿ ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು.
ಶಾಸಕ ಎಸ್.ವಿ. ರಾಮಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ವೀರೇಶ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ನರಸಿಂಹ ನಾಯಕ ಅವರೂ ಇದ್ದರು.