ದಾವಣಗೆರೆ ವಿವಿ: ಪರೀಕ್ಷೆ ನಡೆಸದಿರಲು ಒತ್ತಾಯ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ಜುಲೈ 22ರಂದು ಸ್ನಾತಕೋತ್ತರ ಪದವಿ ಪರೀಕ್ಷೆ ಘೋಷಣೆ ಮಾಡಿರುವುದನ್ನು ಖಂಡಿಸಿ ವಿಶ್ವವಿದ್ಯಾಲಯದ ಎದುರು ಶುಕ್ರವಾರ ಎಐಡಿಎಸ್ಒ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿರುವ ವಿಶ್ವವಿದ್ಯಾಲಯದ ಕ್ರಮ ಖಂಡಿಸಿದ ವಿದ್ಯಾರ್ಥಿಗಳು, ‘ಎಲ್ಲ ವಿದ್ಯಾರ್ಥಿಗಳಿಗೂ ಸರಿಯಾಗಿ ಕೋವಿಡ್ ಲಸಿಕೆ ಸಿಕ್ಕಿಲ್ಲ. ಹಾಸ್ಟೆಲ್ ಮತ್ತು ಬಸ್ ಸಂಪರ್ಕ ಇಲ್ಲ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು’ ಎಂದು ಒತ್ತಾಯಿಸಿದರು.
ಎಲ್ಲಾ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವವರೆಗೆ ಆಫ್ಲೈನ್ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ಅನಿತಾ ಎಚ್.ಎಸ್. ಅವರಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಮನವಿ ಆಲಿಸಿದ ಡಾ. ಅನಿತಾ, ‘ಸರ್ಕಾರದ ಆದೇಶದಂತೆ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಲು ಮುಂದಾಗಿದೆ. ಸರ್ಕಾರ ಸೂಚಿಸಿದರೆ ಪರೀಕ್ಷೆ ಮುಂದೂಡಲಾಗುವುದು’ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಪೂಜಾ, ಪುಷ್ಪ, ಕಾವ್ಯ, ಕಿರಣ್, ಸೌಮ್ಯ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.