ದಾವಣಗೆರೆ: ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಯಾಗಬೇಕು. ಡಿಜಿಟಲ್ ಅಂತರವನ್ನು ಅಳಿಸಿಹಾಕಬೇಕು ಎಂಬ ಉದ್ದೇಶದಿಂದ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಿಸಿ ಟ್ಯಾಬ್ ವಿತರಣೆ ಮಾಡುತ್ತಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಿಸಿ ಟ್ಯಾಬ್ಲೆಟ್ ವಿತರಣೆ ಮತ್ತು ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಟ್ಯಾಬ್ಗಳನ್ನು ಆಟಿಕೆಗಳಾಗಿ ಬಳಸದೆ ಶೈಕ್ಷಣಿಕವಾಗಿ ಬಳಸಿಕೊಂಡು ಉನ್ನತ ಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮೂಲ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹಣಕಾಸು ತೊಂದರೆಯಿಂದ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿಲ್ಲ. ಈ ಕಾರಣದಿಂದ ಶೇ 80 ರಷ್ಟು ಬಡವರು, ಹಿಂದುಳಿದ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ ಎಂದರು.
ಮೇಯರ್ ಎಸ್.ಟಿ. ವೀರೇಶ್, ‘ನಾನಾ ಹೋರಾಟಗಳಿಂದಾಗಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲೇ ಎರಡನೆ ಅತೀ ದೊಡ್ಡ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ’ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ.ಶಂಕರ್.ಆರ್. ಶೀಲಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಈ ಬಾರಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಸಾಧ್ಯತೆ ಇದೆ. ಶಾಸಕರು ಹಾಗೂ ಮೇಯರ್ ಈ ಕಾಲೇಜಿಗೆ ಬೇಕಾದ ಪೀಠೋಪಕರಣ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು’ ಎಂದು ಮನವಿ ಮಾಡಿದರು.
ಶಿವಮೊಗ್ಗ ವಲಯ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ. ವೀರಭದ್ರಯ್ಯ ಕೆ.ಸಿ., ಪಾಲಿಕೆ ಸದಸ್ಯ ಜಿ. ಮಂಜುನಾಥ ಗೌಡ, ಐ.ಕ್ಯೂ.ಎ.ಸಿ ಸಂಚಾಲಕ ಪ್ರೊ.ಟಿ. ವೀರೇಶ, ಐ.ಟಿ. ಸಂಚಾಲಕ ಡಾ.ಮಂಜುನಾಥ ಜೆ.ಎಂ. ಅವರೂ ಇದ್ದರು.