ದಾವಣಗೆರೆ: ಜಿಲ್ಲಾ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವ ಚಿಂತನೆ ಇದೆ. ಈ ಕುರಿತು ಮುಖ್ಯಮಂತ್ರಿ ಜತೆ ಮಾತನಾಡಿದ್ದೇನೆ. ಅನುದಾನ ಬಿಡುಗಡೆ ಮಾಡುವಂತೆಯೂ ಪತ್ರ ಬರೆದಿದ್ದೇನೆ. ಶೀಘ್ರದಲ್ಲಿ ಈ ಕೆಲಸ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.
ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸಾಕಷ್ಟು ಶ್ರಮ ಹಾಕಿ ಕೆಲಸ ಮಾಡುತ್ತಿದೆ. ಹಾಗಾಗಿ ಸೋಂಕಿತರಲ್ಲಿ ಈಗಾಗಲೇ 157 ಮಂದಿ ಬಿಡುಗಡೆಗೊಂಡಿದ್ದು, ಇನ್ನಷ್ಟು ಮಂದಿ ಬಿಡುಗಡೆಗೆ ಸಿದ್ಧಗೊಂಡಿದ್ದಾರೆ’ ಎಂದು ಹೇಳಿದರು.
ಜೂನ್ 12ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯವನ್ನು ಉದ್ಘಾಟಿಸಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯಸಭಾ ಟಿಕೆಟ್ ಹಂಚಿಕೆ ಮಾಡಿದ್ದು ಹೈಕಮಾಂಡ್ ನಿರ್ಧಾರ. ಅದಕ್ಕೆ ನಾವೆಲ್ಲರೂ ಬದ್ದವರಾಗಿದ್ದೇವೆ. ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಲಾಗಿದೆ. ಪ್ರಭಾಕರ ಕೋರೆ ಜತೆ ಮಾತನಾಡಿದ್ದೇನೆ. ಯಾರಿಗೂ ಯಾವುದೇ ಅಸಮಾಧಾನವಿಲ್ಲ ಎಂದರು.