ದಾವಣಗೆರೆ: ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಸರಬರಾಜು ಮಾಡಲು ನಿರ್ಧರಿಸಿದೆ.
ಇದಲ್ಲದೇ ಎಲ್ಲಾ ತಾಲ್ಲೂಕುಗಳಲ್ಲೂ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ರಚಿಸಲಾಗಿದೆ. ಕೊಳವೆಬಾವಿಗಳ ನವೀಕರಣಕ್ಕೆ ಪ್ರತಿ ತಾಲ್ಲೂಕಿಗೆ ₹25 ಲಕ್ಷ ಬಿಡುಗಡೆಯಾಗಿದ್ದು, ಕುಡಿಯುವ ನೀರು ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮುಂದಾಗಿದೆ.
‘ಸದ್ಯದ ಪರಿಸ್ಥಿತಿಯಲ್ಲಿ 9 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಖಾಸಗಿಯವರಿಂದ 13 ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ. ಮುನ್ನೆಚ್ಚರಿಕೆಯಾಗಿ ಇನ್ನೂ 13 ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕುಡಿಯುವ ನೀರು ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.
‘ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ, ಕೆರೆಬಿಳಚಿ ಹೊಸೂರು, ವಡ್ನಾಳ್, ದಾವಣಗೆರೆ ತಾಲ್ಲೂಕಿನ ಕದರಪ್ಪನಹಟ್ಟಿ, ವಿನಾಯಕನಗರ ಕ್ಯಾಂಪ್, ಹರಿಹರ ತಾಲ್ಲೂಕಿನ ದೇವರ ಬೆಳಕೆರೆ, ಹೊನ್ನಾಳಿ ತಾಲ್ಲೂಕಿನ ಹುಣಸೇಹಳ್ಳಿ, ಅರಕೆರೆ, ಕುಂಕುವಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಗ್ರಾಮಗಳಿಗೆ 13 ಖಾಸಗಿ ಬೋರ್ವೆಲ್ಗಳಿಂದ ನೀರು ಪೂರೈಸಲಾಗುತ್ತಿದೆ’ ಎಂದು ತಿಳಿಸಿದರು.
‘ಅಲ್ಲದೇ ದಾವಣಗೆರೆ ತಾಲ್ಲೂಕಿನಲ್ಲಿ 42, ಹರಿಹರ ತಾಲ್ಲೂಕಿನ 21, ಚನ್ನಗಿರಿ ತಾಲ್ಲೂಕಿನ 30, ಹೊನ್ನಾಳಿ ತಾಲ್ಲೂಕಿನ 7, ಹಾಗೂ ಜಗಳೂರು ತಾಲ್ಲೂಕಿನ 26 ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ 126 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿದ್ದು, ತುರ್ತು ಕುಡಿಯುವ ನೀರಿಗೆ 265 ಗ್ರಾಮಗಳಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು.
‘ಪ್ರತಿ ತಾಲ್ಲೂಕಿಗೆ ತಲಾ ₹25 ಲಕ್ಷ ಹಣ ಬಿಡುಗಡೆಯಾಗಿದ್ದು, ಈ ಹಣದಲ್ಲಿ ಕೊಳವೆಬಾವಿಗಳನ್ನು ಆಳಗೊಳಿಸುವುದು, ಸ್ವಚ್ಛಗೊಳಿಸುವುದು ಹಾಗೂ ಫ್ಲಶಿಂಗ್ ಮಾಡುವುದು. ಅವಶ್ಯಕತೆ ಇದ್ದಲ್ಲಿ ಪೈಪ್ಲೈನ್ ಅಳವಡಿಕೆ ಹಾಗೂ ವಿಸ್ತರಣೆಗಳಿಗೆ ಅನುದಾನ ಬಳಸಲಾಗುವುದು’ ಎಂದು ಮಾಹಿತಿ ನೀಡಿದರು.
‘ಜಲಜೀವನ್ ಮಿಷನ್ ಯೋಜನೆಯನ್ನು 4 ಹಂತಗಳಲ್ಲಿ ಕೈಗೆತ್ತಿಕೊಂಡಿದ್ದು, 1 ಹಾಗೂ 2ನೇ ಹಂತದಲ್ಲಿ ಕೆಲವು ಸಮಸ್ಯೆಗಳು ಇದ್ದವು. ಮೂರು ನಾಲ್ಕನೇ ಹಂತಗಳು ವೇಗ ಪಡೆದುಕೊಂಡಿವೆ. ಜಗಳೂರು ತಾಲ್ಲೂಕಿನಲ್ಲಿ ಕೆರೆಗಳಿಗೆ ನೀರು ತುಂಬಿಸಿರುವುದರಿಂದ ಕೊಳವೆ ಬಾವಿಗಳಿಗೆ ಅನುಕೂಲವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.