ಹರಪನಹಳ್ಳಿ: ಜಿಲ್ಲೆಯಲ್ಲಿ ಶೈಕ್ಷಣಿಕ ಕೇಂದ್ರವಾಗಿರುವ ಹರಪನಹಳ್ಳಿಯಲ್ಲಿ ಪ್ರಥಮ ವರ್ಷದ ಪದವಿಗೆ ದಾಖಲಾತಿ ಪ್ರಮಾಣ ಹೆಚ್ಚಿಸಬೇಕು. ಉನ್ನತ ಶಿಕ್ಷಣ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಬೆಳಿಗ್ಗೆ ಬಸ್ ನಿಲ್ದಾಣದ ವೃತ್ತದಿಂದ ಪ್ರವಾಸಿ ಮಂದಿರದ ವೃತ್ತದವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್ ಎಲ್.ಎಂ. ನಂದೀಶ್ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷೆ ಹುಲಿಯಪ್ಪನವರ್ ಬಸವರಾಜ್ ಮಾತನಾಡಿ, ‘ತಾಲ್ಲೂಕು ಹಿಂದುಳಿದ ಪ್ರದೇಶವಾದರೂ, ಶಿಕ್ಷಣದ ವಿದ್ಯಾಕಾಶಿಯಾಗಿದೆ. ಇಲ್ಲಿ ಪದವಿ ಕಾಲೇಜುಗಳ ಸಂಖ್ಯೆ ಹೆಚ್ಚಿದೆ. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಆಗಿರುವ ಎಲ್ಲ ವಿದ್ಯಾರ್ಥಿಗಳಿಗೂ ಪದವಿ ಸೇರುವ ಅವಕಾಶ ದೊರೆಯದಿರುವುದರಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಅತಿ ಹೆಚ್ಚು ಅಂಕ ಪಡೆದವರಿಗೆ ಮಾತ್ರ ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ನಂದೀಶ್, ಪ್ರಕಾಶ್, ಬಾಲಾಜಿ, ಬಸವರಾಜ್, ದೊಡ್ಡಬಸಪ್ಪ, ತಿರುಮಲ, ದೇವರಾಜ್, ವಿನೋದ, ಮೇಘರಾಜ್, ದರ್ಶನ್, ಕೃಷ್ಣಮೂರ್ತಿ, ಬೀರೇಶ್, ಅಭಿಷೇಕ್, ನಿರಂಜನ, ಕಾರ್ತಿಕ್, ಮುತ್ತುರಾಜ್ ಅವರೂ ಈ ಸಂದರ್ಭದಲ್ಲಿ ಇದ್ದರು.