ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಒತ್ತು :ಎಸ್.ವಿ. ರಾಮಚಂದ್ರ ಭರವಸೆ

ಜಗಳೂರು: ‘ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಅಧ್ಯಕ್ಷ, ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ತಾಲ್ಲೂಕಿನ ಭೋವಿ ಸಮಾಜದಿಂದ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
‘ಭೋವಿ ಸಮಾಜ ಅತ್ಯಂತ ಶೋಷಿತ ಸಮಾಜವಾಗಿದೆ. ಉದ್ಯೋಗ ಅರಸಿ ದೂರದ ಊರುಗಳಿಗೆ ಗುಳೆ ಹೋಗು
ವುದು ಅವ್ಯಾಹತವಾಗಿ ನಡೆದಿದೆ. ಬಡಜನರು ಗುಳೆ ಹೋಗುವುದನ್ನು ತಪ್ಪಿಸುವ ಹಾಗೂ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತೇನೆ. ಹಿಂದಿನ ಅವಧಿಯಲ್ಲಿ ಪಟ್ಟಣದಲ್ಲಿ ಮೊದಲ ಬಾರಿಗೆ ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಹಾಸ್ಟೆಲ್ಗೆ ಕಾಂಪೌಂಡ್ ನಿರ್ಮಿಸಲಾಗುವುದು’ ಎಂದು ಭರವಸೆ ನೀಡಿದರು.
‘ಕಳೆದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಗೆ ಟಿಕೆಟ್ ನೀಡುವ ಮೂಲಕ ಹೆಚ್ಚು ಪ್ರಾತಿನಿಧ್ಯ ನೀಡಿದ್ದೇನೆ. ರಾಜಕೀಯವಾಗಿ ಸಮಾಜ ನನಗೆ ಶಕ್ತಿ ನೀಡಿದೆ. ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು,
ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯಕ್ರಮ ಜಾರಿಗೊಳಿಸಲು ಬದ್ಧ’ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಆರ್. ಅಂಜಿನಪ್ಪ, ‘ಹಿಂದುಳಿದ ಭೋವಿ ಸಮಾಜದವರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಭೂ ರಹಿತರೇ ಹೆಚ್ಚಾಗಿರುವ ಸಮುದಾಯದವರಿಗೆ ಸರ್ಕಾರದ ಯೋಜನೆಗಳು ತಲುಪಬೇಕಿದೆ’ ಎಂದರು.
ವಕೀಲ ಡಿ. ಶ್ರೀನಿವಾಸ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಕೆ. ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ತಿಮ್ಮಾಭೊವಿ, ಮರೇನಹಳ್ಳಿ ಬಸವರಾಜ್, ಎಚ್. ನಾಗರಾಜ್, ಬಿಇಓ ವೆಂಕಟೇಶ್, ಮುಖಂಡರಾದ ಎ. ವೆಂಕಟೇಶ್, ವೀರಪ್ಪ, ದಾಸಪ್ಪ, ಗೋವಿಂದಪ್ಪ, ವಿರೂಪಾಕ್ಷ, ತಿರುಮಲೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.