ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಶುಕ್ರವಾರ ಮೃತ್ಯುಂಜಯ ಹಾಗೂ ಧನ್ವಂತರಿ ಹೋಮ ನಡೆಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಶಾಸಕರಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ತಹಶೀಲ್ದಾರರಿಗೆ ಸೂಚಿಸಿದ್ದಾರೆ.
ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಕಾನೂನು ಎಲ್ಲರಿಗೂ ಒಂದೇ. ಕೋವಿಡ್ ಕೇರ್ ಸೆಂಟರ್ನಲ್ಲಿ ಹೋಮ ಕುರಿತು ಶಾಸಕರಿಗೆ ನೋಟಿಸ್ ನೀಡಲು ಸೂಚಿಸಿದ್ದೇನೆ’ ಎಂದು ಸ್ಪಷ್ಟಪಡಿಸಿದರು.
ತಹಶೀಲ್ದಾರ್ ವಿರುದ್ಧ ಆಕ್ರೋಶ: ಶಾಸಕರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂಬ ಸುದ್ದಿ ತಿಳಿದು, ಕೋವಿಡ್ ಸೆಂಟರ್ನಲ್ಲಿ ಸೋಂಕಿತರು, ‘ಊಟ ಮಾಡುವುದಿಲ್ಲ’ ಎಂದು ಶುಕ್ರವಾರ ರಾತ್ರಿ ಪಟ್ಟು ಹಿಡಿದು ತಹಶೀಲ್ದಾರ್ ವಿರುದ್ಧ ಪ್ರತಿಭಟಿಸಿದರು.
ಕೋವಿಡ್ ಸೆಂಟರ್ನಲ್ಲಿ ವಾಸ್ತವ್ಯ ಮಾಡುತ್ತಿದ್ದ ಶಾಸಕರೂ ಆಕ್ರೋಶ ವ್ಯಕ್ತಪಡಿಸಿದರು. ‘ಮಾಜಿ ಶಾಸಕರ ಕುಮ್ಮಕ್ಕು ಇದಕ್ಕೆ ಕಾರಣ. ಇಲ್ಲೇ ಮಣ್ಣಾದ್ರೂ ಕೋವಿಡ್ ಕೇರ್ ಸೆಂಟರ್ ಬಿಟ್ಟು ಹೋಗಲ್ಲ. ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಇದಕ್ಕೆಲ್ಲ ಹೆದರಲ್ಲ’ ಎಂದು ರೇಣುಕಾಚಾರ್ಯ ಹೇಳಿದರು.