ದಾವಣಗೆರೆ: ನವೆಂಬರ್, ಡಿಸೆಂಬರ್ನಲ್ಲಿ ಮಳೆ ಬಂದರೆ ಏಪ್ರಿಲ್, ಮೇ ತಿಂಗಳಲ್ಲಿ ನೀರಿನ ಕೊರತೆ ಉಂಟಾಗಲ್ಲ ಎಂಬ ಜನರ ಅನುಭವದ ಮಾತಿಗೆ ಸರಿಯಾಗಿ ಕೆಲವು ದಿನಗಳಿಂದ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ, ಬುಧವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ₹ 63.50 ಲಕ್ಷ ನಷ್ಟ ಉಂಟಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 20 ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಹರಿಹರ ತಾಲ್ಲೂಕಿಲ್ಲಿ 1 ಕಚ್ಚಾ ಮನೆಗೆ ಭಾಗಶಃ ಹಾನಿಯಾಗಿದೆ. 695 ಎಕರೆ ಭತ್ತದ ಬೆಳೆ ನಷ್ಟವಾಗಿದೆ.
ಹೊನ್ನಾಳಿ ತಾಲ್ಲೂಕಿನಲ್ಲಿ 3 ಪಕ್ಕಾ ಮನೆ, ನ್ಯಾಮತಿ ತಾಲ್ಲೂಕಿನಲ್ಲಿ 1 ಪಕ್ಕಾ ಮನೆ, ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ, 4 ಕಚ್ಚಾ ಮನೆಗಳಿಗೆ ಹಾನಿಯಾಗಿದೆ.
ಸರ್ಕಾರದ ಮಾರ್ಗಸೂಚಿಯ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಮನೆಗೆ ನುಗ್ಗಿದ ನೀರು: ಹರಿಹರ ತಾಲ್ಲೂಕು ಹೊಳೆಸಿರಿಗೆರೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಕಾಲುವೆಗಳು ತುಂಬಿದ್ದರಿಂದ ಈ ಅವಾಂತರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಮನೆ ಒಳಗೊಂಡಂತೆ ಹಲವು ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ.