ದಾವಣಗೆರೆ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ ಚನ್ನಗಿರಿ ತಾಲ್ಲೂಕಿನ ಕೋಗಲೂರು ಕ್ಷೇತ್ರದ ಸದಸ್ಯೆ ಸಾಕಮ್ಮ ಗಂಗಾಧರ ನಾಯ್ಕ ಅವಿರೋಧವಾಗಿ ಆಯ್ಕೆಯಾದರು.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ವಿ.ಪಿ. ಇಕ್ಕೇರಿ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.
ಒಟ್ಟು 29 ಸದಸ್ಯರಲ್ಲಿ 20 ಮಂದಿ ಭಾಗವಹಿಸಿದ್ದರು. ಸಾಕಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಆಯುಕ್ತರು ಘೋಷಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ ಇದ್ದರು.
ಆರೋಗ್ಯಕ್ಕೆ ಆದ್ಯತೆ: ‘ಕೊರೊನಾ ವೈರಸ್ ಸೋಂಕು ಬಂದಿರುವುದರಿಂದ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುವುದು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಬಗ್ಗೆ ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲು ಆದ್ಯತೆ ನೀಡುವೆ’ ಎಂದು ಸಾಕಮ್ಮ ಪ್ರತಿಕ್ರಿಯಿಸಿದರು.
ಜಿಲ್ಲಾ ಪಂಚಾಯಿತಿಗೆ ಅನುದಾನ ಬಹಳ ಕಡಿಮೆ ಬಂದಿದೆ. ಆದರೂ ಶಾಸಕರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳ್ನನು ನಡೆಸಲಾಗುವುದು. ನರೇಗಾ ಮೂಲಕ ಜನರಿಗೆ ಉದ್ಯೋಗ ನೀಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.