ದಾವಣಗೆರೆ: ಪೌರ ಕಾರ್ಮಿಕರ ಗೃಹ ನಿರ್ಮಾಣ ಕಾರ್ಯವು ಮೂರ್ನಾಲ್ಕು ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. ಶೀಘ್ರದಲ್ಲೇ ಅವುಗಳನ್ನು ಪೌರ ಕಾರ್ಮಿಕರಿಗೆ ಹಸ್ತಾಂತರಿಸಲಾಗುವುದು ಎಂದು ಮೇಯರ್ ಬಿ.ಜಿ. ಅಜಯಕುಮಾರ್ ಹೇಳಿದರು.
ಪಾಲಿಕೆ ಆವರಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಪೌರ ಕಾರ್ಮಿಕರ ನಿರ್ಮಾಣ ಸ್ಥಳಕ್ಕೆ 2 ಬಾರಿ ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ಕರೆದುಕೊಂಡು ಹೋಗಿ ತೋರಿಸಲಾಗಿದೆ. ವೇಗವಾಗಿ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಹಾಗೂ ಎಂಜಿನಿಯರ್ಗೆ ಸಚಿವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಮಾತನಾಡಿ, ‘ಪಾಲಿಕೆ ನೌಕರರಿಗೆ ಅವರು ನಿವೃತ್ತಿಯಾಗುವ ದಿನದಂತೆ ಅವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ. ಕೊರೊನಾ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಚ್ಯವನ್ಪ್ರಾಶ್ ಆಯುಷ್ ಇಲಾಖೆ ಮಾರ್ಗದರ್ಶನ ಪಡೆದು ವಿತರಿಸಲಾಗಿದೆ. ಇದರಿಂದಾಗಿ ಬೇರೆ ನಗರಗಳಿಗೆ ಹೋಲಿಸಿದರೆ ನಮ್ಮ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರಲ್ಲಿ ಬಹಳ ಕಡಿಮೆ ಕೊರೊನಾ ಪ್ರಕರಣಗಳು ಕಂಡು ಬಂದಿದೆ’ ಎಂದರು.
ತೆರಿಗೆ ಹಣಕಾಸು ಮತ್ತು ಮೇಲ್ಮನವಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರನ್ನು ಉತ್ತಮವಾದ ಹುದ್ದೆಗಳಿಗೆ ಕಳುಹಿಸಬೇಕು. ಅವರನ್ನು ಪುನಃ ಪೌರ ಕಾರ್ಮಿಕರನ್ನಾಗಿ ಮಾಡಬಾರದು’ ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಹಿರಿಯ ಪೌರ ಕಾರ್ಮಿಕರಾದ ಪಕೀರಮ್ಮ ನಿಂಗಪ್ಪ ಉದ್ಘಾಟಿಸಿದರು. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಎಸ್.ಆರ್. ಸ್ವಾಗತಿಸಿದರು.
ಉಪಮೇಯರ್ ಸೌಮ್ಯಾ ನರೇಂದ್ರಕುಮಾರ್, ಸ್ಥಾಯಿಸಮಿತಿ ಅಧ್ಯಕ್ಷರಾದ ಎಸ್.ಟಿ. ವೀರೇಶ್ ಗೌರಮ್ಮ ಗಿರಿರಾಜ್, ಜಯಮ್ಮ ಬಾಲರಾಜ್, ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪೌರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ನೀಲಗಿರಿಯಪ್ಪ ಹಾಗೂ ಗೋವಿಂದರಾಜ್ ಇದ್ದರು.