ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳುಗಾರಿಕೆ ವಿಚಾರ | ಶಾಸಕ ಹರೀಶ್‌ಗೆ ಜೀವ ಬೆದರಿಕೆ: ಎಸ್‌ಪಿಗೆ ದೂರು

Published 23 ಏಪ್ರಿಲ್ 2024, 14:38 IST
Last Updated 23 ಏಪ್ರಿಲ್ 2024, 14:38 IST
ಅಕ್ಷರ ಗಾತ್ರ

ದಾವಣಗೆರೆ: ಅಕ್ರಮ ಗಣಿಗಾರಿಕೆ ಬಯಲು ಮಾಡಿದ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಪ್ರಾಣ ಬೆದರಿಕೆ ಹಾಕಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆಪಾದಿಸಿದೆ.

‘ಹರಿಹರ ತಾಲ್ಲೂಕಿನ ಚಿಕ್ಕಬಿದರಿ ಗ್ರಾಮ ಮತ್ತು ಹರಪನಹಳ್ಳಿ ತಾಲ್ಲೂಕಿನ ವಟ್ಲಹಳ್ಳಿ ಗ್ರಾಮಗಳ ನಡುವೆ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯ ಬಗ್ಗೆ ಬಿ.ಪಿ. ಹರೀಶ್ ಅವರು ಮಾಧ್ಯಮದವರನ್ನು ಕರೆದುಕೊಂಡು ತೋರಿಸಿದ್ದರು. ಮಂಗಳವಾರ ಬೆಳಿಗ್ಗೆ ವಾಯುವಿಹಾರ ಮುಗಿಸಿ ಸಿ.ಜಿ.ಆಸ್ಪತ್ರೆಯ ಎದುರಿನ ಕಾಫಿ ಬಾರ್ ಎದುರು ಇದ್ದಾಗ ಮರಳು ಗಣಿಗಾರಿಕೆ ಮಾಲೀಕರ ಸಹೋದರನೊಬ್ಬ ಧಮ್ಕಿ ಹಾಕಿ, ಪ್ರಾಣ ಬೆದರಿಕೆ ಹಾಕಿದ್ದಾನೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಹೇಳಿದರು.

‘ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆ ಮಾಡುವವರು ಎಂತಹ ದುಷ್ಕೃತ್ಯವನ್ನಾದರೂ ಎಸಗಬಲ್ಲರು ಎಂಬುದಕ್ಕೆ ಹಲವು ಉದಾಹರಣೆಗಳು ಇವೆ. ಆದ್ದರಿಂದ ಧಮ್ಕಿ ಹಾಕಿದವರನ್ನು ಬಂಧಿಸಬೇಕು ಹಾಗೂ ಶಾಸಕ ಹರೀಶ್ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ’ ಎಂದು ಅವರು ತಿಳಿಸಿದರು.

‘ಮರಳು ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾಕಷ್ಟು ನಷ್ಟವಾಗಲಿದ್ದು, ಮರಳು ದರ ದುಬಾರಿಯಾಗುತ್ತದೆ. ಜನ ಸಾಮಾನ್ಯರಿಗೆ ಮನೆ ನಿರ್ಮಾಣಕ್ಕೆ ಮರಳು ಸಿಗುವುದಿಲ್ಲ’ ಎಂದು ಹೇಳಿದರು.

‘ಈ ವಿಚಾರವನ್ನು ಬಿಜೆಪಿಯವರು ಶಾಸಕಾಂಗ ಸಭೆಯಲ್ಲಿಯೂ ಪ್ರಸ್ತಾಪ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜಿಲ್ಲಾಡಳಿತ ಇದಕ್ಕೆ ಉತ್ತರಿಸಬೇಕು. ಕಾಂಗ್ರೆಸ್‌ನವರು ಸಂವಿಧಾನದ ಹೆಸರೇಳಿಕೊಂಡು ಹೊಟ್ಟೆಪಾಡಿನ ರಾಜಕಾರಣ ಮಾಡಿತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ್ ಕಡ್ಲೇಬಾಳು, ಅಣಜಿ ಅಣ್ಣೇಶ್, ಅನಿಲ್ ಕುಮಾರ್ ನಾಯಕ್, ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ, ಎಚ್.ಎನ್. ಗುರುನಾಥ್, ಶ್ರೀನಿವಾಸ ದಾಸಕರಿಯಪ್ಪ, ಆರ್.ಎಲ್. ಶಿವಪ್ರಕಾಶ್, ಕುಂದುವಾಡ ಪ್ರಕಾಶ್, ಕುಂದುವಾಡ ಹನುಮಂತಪ್ಪ, ಕೊಳೇನಹಳ್ಳಿ ಬಿ.ಎಂ. ಸತೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT