ದಾವಣಗೆರೆ: ದೇಶದ ಒಟ್ಟು ಜನಸಂಖ್ಯೆಯಲ್ಲಿ ಅಧಿಕ ಪಾಲಿರುವ ಯುವ ಸಮುದಾಯ ದೇಶದ ಆಸ್ತಿ. ಯುವಶಕ್ತಿಯ ಸದ್ಬಳಕೆಯಾದಲ್ಲಿ ದೇಶದ ಸರ್ವ ಕ್ಷೇತ್ರಗಳಲ್ಲೂ ಪ್ರಗತಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್. ಬಾಲಾಜಿ ಹೇಳಿದರು.
ನಗರದ ಮಲ್ಲಿಕಾರ್ಜುನ ಕೈಗಾರಿಕಾ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ದಾವಣಗೆರೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಂಘಟನೆ ಮತ್ತು ಅರಿವು ಕಾರ್ಯಾಗಾರಗಳ ಮೂಲಕ ಒಕ್ಕೂಟವು ಯುವ ಜನರ ಸಬಲೀಕರಣ ಹಾಗೂ ಸಶಕ್ತೀಕರಣಕ್ಕಾಗಿ ಶ್ರಮಿಸುತ್ತಿದೆ. ಸರ್ಕಾರದಿಂದ ಯುವ ಜನರಿಗೆ ಸಿಗಬಹುದಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುವ ಪ್ರಯತ್ನ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಒಕ್ಕೂಟದ ಸಹಕಾರವನ್ನು ಪಡೆಯಬಹುದು ಎಂದು ತಿಳಿಸಿದರು.
ಮಲ್ಲಿಕಾರ್ಜುನ ಕೈಗಾರಿಕಾ ತರಬೇತಿ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಗುರುಸಿದ್ದಯ್ಯ, ‘ಯುವಜನರು ವ್ಯಕ್ತಿತ್ವ ವಿಕಸನ ಹಾಗೂ ಉತ್ತಮ ಚಾರಿತ್ರ್ಯ ನಿರ್ಮಾಣಕ್ಕೆ ಸಹಕಾರಿಯಾಗುವಂತಹ ಶಿಬಿರಗಳನ್ನು ಆಯೋಜಿಸುವ ಮತ್ತು ಉತ್ತಮ ಕಾರ್ಯಕ್ರಮಗಳನ್ನು ಒಕ್ಕೂಟ ಹಮ್ಮಿಕೊಳ್ಳಲಿ’ ಎಂದು ಹೇಳಿದರು.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಅಶೋಕ್ ಕುಮಾರ್ ಮಾತನಾಡಿದರು.
ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಎನ್.ಕೆ. ಕೊಟ್ರೇಶ್, ಉಪಾಧ್ಯಕ್ಷರಾಗಿ ಗಂಗಾಧರ ಬಿ.ಎಲ್. ನಿಟ್ಟೂರ್, ಕಾರ್ಯದರ್ಶಿಯಾಗಿ ಭೋಜರಾಜ್ ಸಿ.ಕೆ., ಖಜಾಂಚಿಯಾಗಿ ಗೀತಾ ಮಾಲತೇಶ್, ಜಂಟಿ ಕಾರ್ಯದರ್ಶಿಯಾಗಿ ಬಡಪ್ಪ ಟಿ., ಸಂಘಟನಾ ಕಾರ್ಯದರ್ಶಿಯಾಗಿ ಶಿವಮೂರ್ತಿ, ಕ್ರೀಡಾ ಕಾರ್ಯದರ್ಶಿಯಾಗಿ ಶಿವಕುಮಾರ್ ಡಿ.ಬಿ., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉಮೇಶ್ ನಾಯ್ಕ್ ಹಾಗೂ ಸಂಚಾಲಕರಾಗಿ ಗಿರಿಧರ ಪದಗ್ರಹಣ ಮಾಡಿದರು.
ಎನ್.ಕೆ. ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಗಂಗಾಧರ ಬಿ.ಎಲ್ ನಿಟ್ಟೂರ್ ನಿರೂಪಿಸಿದರು. ಭೋಜರಾಜ್ ಸ್ವಾಗತಿಸಿದರು.
ಒಕ್ಕೂಟದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.