ಹುಬ್ಬಳ್ಳಿ: ತಾಲ್ಲೂಕಿನ ತಿರಮಲಕೊಪ್ಪ ಗ್ರಾಮದ ಜಗದ್ಗುರು ರೇಣುಕಾ ಧರ್ಮ ನಿವಾಸದಲ್ಲಿ ಶನಿವಾರ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಮತ್ತು ರೇಣುಕಾಚಾರ್ಯ ನೂತನ ರಥೋತ್ಸವದ ಕಾರ್ಯಕ್ರಮ ನಡೆಯಿತು.
ಈ ವೇಳೆ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಬಾಳೆಹೊನ್ನೂರಿನ ರಂಭಾಪುರಿ ಮಠದ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶೀಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ವಿಮಲ ರೇಣುಕ ವೀರ ಮುಕ್ತಿಮುನಿ ಸ್ವಾಮೀಜಿ ಇದ್ದರು. ಪ್ರಹ್ಲಾದ ಜೋಶಿ ಉದ್ಘಾಟನೆ ನೆರವೇರಿಸಿದರು.
ನಂತರ ಮಾತನಾಡಿದ ರಂಭಾಪುರಿ ಸ್ವಾಮೀಜಿ ‘ಪ್ರಹ್ಲಾದ ಜೋಶಿ ಸಂಸ್ಕಾರ ಹಾಗೂ ಸಂಸ್ಕೃತಿ ಮೈಗೂಡಿಸಿಕೊಂಡವರು. ಸದಾ ಕ್ರಿಯಾಶೀಲ ಕೆಲಸಗಳಿಂದ ಜನರ ಪ್ರೀತಿ ಗಳಿಸಿದ್ದಾರೆ. ಗುರು ಹಿರಿಯರಲ್ಲಿ ಭಕ್ತಿ, ಧರ್ಮ ಪೀಠಗಳಲ್ಲಿ ಶ್ರದ್ದೆ ಮತ್ತು ರಾಜಕೀಯ ಇಚ್ಛಾಶಕ್ತಿಯಿಂದ ಜನಸೇವೆ ಮಾಡುತ್ತಿದ್ದಾರೆ’ ಎಂದರು.
ಶಿವಸಿದ್ಧರಾಮೇಶ್ವರ ಸ್ವಾಮೀಜಿ, ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ನಾಗಭೂಷಣ ಸ್ವಾಮೀಜಿ, ರೇವಣಸಿದ್ದ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ, ಶಿತಕಂಠೇಶ್ವರ ಸ್ವಾಮೀಜಿ ಕಾರ್ಯಕ್ರಮದಲ್ಲಿ ಇದ್ದರು.
ವೀರಶೈವ ಸಮಾಜದ ಮುಖಂಡ ಪ್ರಕಾಶ ಬೆಂಡಿಗೇರಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ಘಟಕದ ಇಂಟೆಕ್ ವಿಭಾಗದ ಅಧ್ಯಕ್ಷ ಬಂಗಾರೇಶ ಹಿರೇಮಠ, ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿ ಇದ್ದರು.