ಹರಿಹರ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ 2020ರಲ್ಲಿ ನಡೆದಿದ್ದ ಗಲಭೆ ಪ್ರಕರಣದ ಆರೋಪಿ, ನಗರದ ತಾಹಿರ್ ಹುಸೇನ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಅವಹೇಳನ ಮಾಡಲಾಗಿದೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಭೆಗಳು ನಡೆದಿದ್ದವು. ಈ ಪ್ರಕರಣದಲ್ಲಿ ಹರಿಹರದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಪದಾಧಿಕಾರಿಯಾಗಿದ್ದ ತಾಹೀರ್ ಹುಸೇನ್ ಆರೋಪಿಗಳ ಪಟ್ಟಿಯಲ್ಲಿದ್ದ ಎನ್ನಲಾಗಿದೆ.
ಆರೋಪಿ ಪೊಲೀಸರ ಕೈಗೆ ಸಿಗದೆ ತಲೆ ತಪ್ಪಿಸಿಕೊಂಡಿದ್ದ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರಿನ ಪೊಲೀಸರು ಹರಿಹರದ ಮನೆಯಿಂದ ಆರೋಪಿಯನ್ನು ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
‘ಬೆಂಗಳೂರು ಪೊಲೀಸರು ಹರಿಹರದ ನಿವಾಸಿಯೊಬ್ಬರನ್ನು ವಶಕ್ಕೆ ಪಡೆದಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಒಬ್ಬರನ್ನು ಕರೆದೊಯ್ದಿದ್ದಾಗಿ ಬಲ್ಲ ಮೂಲಗಳು ಖಚಿತಪಡಿಸಿವೆ.