ದಾವಣಗೆರೆ: ಸಾರ್ವಜನಿಕರು ತಮ್ಮ ಕುಂದುಕೊರತೆ ಹಾಗೂ ಸಲಹೆಗಳನ್ನು ಪತ್ರದ ಮೂಲಕ ಕಾನೂನು ಸೇವಾ ಸಲಹಾ ಪಟ್ಟಿಗೆಗೆ ಹಾಕಿದರೆ ಈ ಪತ್ರಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ತಿಳಿಸಿದರು.
ಪಿ.ಜೆ. ಬಡಾವಣೆಯಲ್ಲಿರುವ ಮಹಿಳಾ ಪೊಲೀಸ್ ಠಾಣೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಸೇವಾ ಸಲಹೆ ಪಟ್ಟಿಗೆಗಳ ಸೇವೆಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಹೈಕೋರ್ಟ್ ಆದೇಶ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈ ಕಾರ್ಯಕ್ರವನ್ನು ಪ್ರಾರಂಭಿಸಲಾಗಿದೆ. ಪ್ರತಿಯೊಬ್ಬ ಪ್ರಜೆಯ ಕುಂದುಕೊರತೆಗಳಿಗೆ ಪರಿಹಾರ ನೀಡುವ ಉದ್ದೇಶದಿಂದ ಈ ಸೇವೆ ಆರಂಭಿಸಲಾಗಿದೆ ಎಂದರು.
ಸಾರ್ವಜನಿಕ ಸ್ಥಳಗಳಾದ ಪೊಲೀಸ್ ಠಾಣೆ, ತಾಲ್ಲೂಕು ಪಂಚಾಯಿತಿ ಹಾಗೂ ಮಹಿಳಾ ಸಂಘಗಳ ಆವರಣಗಳಲ್ಲಿ ಇಡುವ ಸಲಹಾ ಪೆಟ್ಟಿಗೆಗಳಲ್ಲಿ ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಬರೆದು ಹಾಕಿದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ದೇಶನದಲ್ಲಿ ಪರಿಹಾರ ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಿಪಿಐ ಜೆ.ಲಕ್ಷ್ಮಣ್, ‘ಹಲವು ಬಾರಿ ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದು ದೂರುಗಳನ್ನು ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಅಂತಹ ಸಂದರ್ಭಗಳಲ್ಲಿ ಕಾನೂನು ಸೇವಾ ಸಲಹಾ ಪೆಟ್ಟಿಗೆಯನ್ನು ಉಪಯೋಗಿಸಿಕೊಳ್ಳಬಹುದು’ ಎಂದು ಹೇಳಿದರು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಎಲ್.ಎಚ್. ಅರುಣ್ ಕುಮಾರ್, ಪಿಎಸ್ಐ ಮಾಳಮ್ಮ, ಎ.ಎಸ್.ಐ ತಿಪ್ಪೇಸ್ವಾಮಿ, ಹೆಡ್ ಕಾನ್ಸ್ಟೆಬಲ್ ಸುರೇಶ್ ಹಾಜರಿದ್ದರು.