ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸ

ಬದಲಾವಣೆ ಮೊದಲು ನಮ್ಮಿಂದ ಆಗಲಿ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಲಹೆ
Last Updated 2 ಅಕ್ಟೋಬರ್ 2020, 10:55 IST
ಅಕ್ಷರ ಗಾತ್ರ

ದಾವಣಗೆರೆ: ‘ನೀವು ಮತ್ತೊಬ್ಬರಲ್ಲಿ ಏನು ಬದಲಾವಣೆ ಕಾಣಬಯಸುತ್ತೀರೋಆ ಬದಲಾವಣೆ ಮೊದಲು ನಿಮ್ಮಿಂದ ಆಗಬೇಕು ಎಂಬ ಗಾಂಧೀಜಿಯವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಂದೇ ಸಂಕಲ್ಪ ಮಾಡಿ’ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಸಲಹೆ ನೀಡಿದರು.

ಜಿಲ್ಲಾಡಳಿತದಿಂದ ಮಹಾನಗರಪಾಲಿಕೆ ಆವರಣದಲ್ಲಿ ಶುಕ್ರವಾರ ನಡೆದ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತ್ಯುತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೇರೆಯವರು ಸ್ವಚ್ಛವಾಗಿರಬೇಕು ಎಂಬ ಭಾವನೆ ನಿಮ್ಮಲ್ಲಿ ಬಂದರೆ ಮೊದಲು ನೀವು ಸ್ವಚ್ಛವಾಗಿರಬೇಕು. ಸತ್ಯ ಹೇಳಬೇಕು ಅಂದರೆ ನೀವು ಮೊದಲು ಸತ್ಯ ಹೇಳುವುದನ್ನು ಕಲಿಯಬೇಕು. ಇದರಿಂದಾಗಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸುಧಾರಣೆ ಸಾಧ್ಯವಾಗಲಿದೆ‘ ಎಂದರು.

ಗಾಂಧೀಜಿಯವರ ಕಲ್ಪನೆಗಳಾದ ಸತ್ಯ, ಅಹಿಂಸೆ ಸಮಾನತೆ, ಗ್ರಾಮ ಸ್ವರಾಜ್ಯ, ಸ್ವಚ್ಛಭಾರತ ಇವುಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಜಗ ಮೆಚ್ಚಿದ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಸರಳ, ಸಜ್ಜನಿಕೆ ನಮಗೆ ಮಾದರಿ. ಸರಳತೆ ಅವರ ಜೀವನ ಸಂದೇಶವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಮಾತನಾಡಿ, ‘ಗಾಂಧೀಜಿಯವರ ಮೈ ಎಕ್ಸಿಪೆರಿಮೆಂಟ್ ವಿಥ್ ಟ್ರೂಥ್ ಕೃತಿಯಲ್ಲಿರುವಂತೆ ಗಾಂಧೀಜಿಯವರು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಒಂದು ಹೆಜ್ಜೆ ಮುಂದೆ ಇದ್ದರು. ಅವರ ಆ ಧೈರ್ಯ ಮತ್ತು ನಿಷ್ಠೆ ಮಹಾತ್ಮರಾಗಲು ಕಾರಣವಾಯಿತು. ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮನಾಗಬೇಕು ಎಂದರೆ ಒಂದು ಹೆಜ್ಜೆ ಮುಂದೆ ಹೋಗಬೇಕು‘ ಎಂದು ಸಲಹೆ ನೀಡಿದರು.

ಗಾಂದೀಜಿಯವರ ಬಗ್ಗೆ ತಿಳಿದುಕೊಳ್ಳದೇ ಕೆಲವರು ಹಗುರವಾಗಿ ಮಾತನಾಡುತ್ತಾರೆ.ಹರಿಜನ ಉದ್ದಾರಕರಾದ ಅವರು ಹೆಣ್ಣುಮಕ್ಕಳು ಮಧ್ಯರಾತ್ರಿಯಲ್ಲಿ ಸ್ವತಂತ್ರವಾಗಿ ಓಡಾಡುವ ಸ್ಥಿತಿ ಬಂದಾಗ ನಮಗೆ ನಿಜವಾದ ಸ್ವಾತಂತ್ರ್ಯ ಎಂದಿದ್ದರು. ಈ ಕನಸು ನನಸಾಗುವ ದಾರಿ ತುಂಬಾ ದೂರವಾಗಿದೆ ನಾವೆಲ್ಲ ಸೇರಿ ಅವರ ಕನಸನ್ನು ನನಸು ಮಾಡುವ ಪ್ರಯತ್ನ ಮಾಡಬೇಕೆಂದರು.

ಸುಶ್ರಾವ್ಯ ಗಾಯನ:ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಶಿಕ್ಷಕರು ಗಾಂಧೀಜಿಯವರಿಗೆ ಪ್ರಿಯವಾಗಿದ್ದ ‘ವೈಷ್ಣವಜನತೋ’ ‘ರಘುಪತಿ ರಾಜಾರಾಂ’ ಸೇರಿ ಹಲವು ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಅಲ್ಲದೇ ಸುಶ್ರಾವ್ಯವಾಗಿ ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀರೇಶ್, ಪ್ರಸನ್ನ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ದೂಢಾ ಆಯುಕ್ತ ಕುಮಾರಸ್ವಾಮಿ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕಿ ನಜ್ಮಾ, ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ದಾವಣಗೆರೆ ತಹಶೀಲ್ದಾರ್ ಗಿರೀಶ್,ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT