ಜಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಕಾಮಗಾರಿಯ ಕೂಲಿ ಹಣದ ಮೊತ್ತವನ್ನು ಹೆಚ್ಚಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದ ಕೂಲಿಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮೂಹಿಕವಾಗಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದ್ದಾರೆ.
ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ದಿನಗಳಿಂದ 200 ದಿನಗಳಿಗೆ ಹೆಚ್ಚಿಸುವುದು, ಜಾತಿ ಆಧಾರದಲ್ಲಿ ಕೂಲಿ ಹಣ ಪಾವತಿ ಮಾಡುವುದನ್ನು ಬಿಟ್ಟು ಎ್ಲಲರಿಗೂ ಸಮಾನವಾಗಿ ಪಾವತಿ ಮಾಡುವುದು ಹಾಗೂ ಕನಿಷ್ಠ ಕೂಲಿ ಮೊತ್ತವನ್ನು ₹ 600ಕ್ಕೆ ಹೆಚ್ಚಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಕೂಲಿಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.