ದಾವಣಗೆರೆ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಅನುಕೂಲವಾಗುವಂತೆ ನಿಟ್ಟಿನಲ್ಲಿ ಮೊಬೈಲ್ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದು ಸಮಾಜ ಕಲ್ಯಾಣ ಮತ್ತು ಲೋಕೊಪಯೋಗಿ ಖಾತೆ ಸಚಿವ ಗೋವಿಂದ ಕಾರಜೋಳ ಹೇಳಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಇಲಾಖಾ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್–19 ಕಾರಣದಿಂದ ಮಕ್ಕಳ ಶಿಕ್ಷಣ ಪ್ರಗತಿ ಕುಂಠಿತವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ ರಾಜ್ಯದಾದ್ಯಂತ ‘ವಿದ್ಯಾಗಮ’ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತಿದೆ. ಈ ಮಧ್ಯೆ ಎಸ್ಸಿ, ಎಸ್ಟಿ ಮಕ್ಕಳಿಗೆ ಮೊಬೈಲ್ ನೀಡುವ ಚಿಂತನೆ ಕೂಡ ಸರ್ಕಾರದ ಮುಂದಿದೆ ಎಂದರು.
ಕೊರೊನಾ ಸಂಕಷ್ಟದ ಕಾರಣದಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಓದುತ್ತಿರುವ ಮಕ್ಕಳಿಗೆ ಆನ್ಲೈನ್ ತರಗತಿ, ಟ್ಯೂಷನ್ ನಡೆಸುತ್ತಿದ್ದು, ಅವರಿಗೆ ಅನುಕೂಲವಾಗುವಂತೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ನೇಮಕ ಮಾಡಿ, ಅವರ ನೇತ್ರತ್ವದಲ್ಲಿ ಮಕ್ಕಳಿಗೆ ಪಾಠ ಮಾಡುವ ಯೋಜನೆ ರೂಪಿಸಿದೆ’ ಎಂದು ಹೇಳಿದರು.
‘ಮೂಲಭೂತ ಸೌಕರ್ಯ ಇಲಾಖೆಯ ಸಹಯೋಗದೊಂದಿಗೆ ₹17 ಕೋಟಿ ವೆಚ್ಚದಲ್ಲಿ ಬೀದರ್ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದು, ₹220 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಿದ್ದು, ವಿಜಯಪುರದಲ್ಲಿ ₹220 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ’ ಎಂದು ಹೇಳಿದರು.
ಏಕರೂಪದ ದರ ಪಟ್ಟಿ:ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟಂತೆ ನಿರ್ಮಾಣ ಸಾಮಗ್ರಿಗಳಿಗೆ ರಾಜ್ಯದಾದ್ಯಂತ ಏಕರೂಪದ ದರಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭ ತಿಳಿಸಿದರು.
ಬೆಂಗಳೂರು, ಮೈಸೂರು, ಕಲಬುರ್ಗಿ, ಬೆಳಗಾಂ ವಲಯಗಳಲ್ಲಿ ದರಪಟ್ಟಿ ವ್ಯತ್ಯಾಸವಿತ್ತು. ಈಗ ಅದನ್ನು ಒಂದೇ ದರ ನಿಗದಿಪಡಿಸಲಾಗುವುದು ಎಂದು ಹೇಳಿದರು.