ಹೊನ್ನಾಳಿ: ‘ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು’ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಹಿರೇಮಠದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಎಂಬ ಗೋಡೆ ಬರಹಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣದಿಂದ ಹೊಟ್ಟೆ ತುಂಬುತ್ತದೆಯೇ ಎಂದು ಪ್ರಶ್ನೆ ಮಾಡಿದವರಿಗೆ ಇದೀಗ ಉತ್ತರ ಸಿಕ್ಕಿದೆ. ಉತ್ತರ ಪ್ರದೇಶ ಸರ್ಕಾರಕ್ಕೆ ₹ 20 ಸಾವಿರ ಕೋಟಿ ಶ್ರೀರಾಮ ಮಂದಿರದಿಂದಲೇ ಆದಾಯ ಬರುತ್ತದೆ ಎಂದು ಎಸ್ಬಿಐ ಸಮೀಕ್ಷೆಯಿಂದ ಗೊತ್ತಾಗಿದೆ. ರಾಮನ ಮಂದಿರವನ್ನು ನಾವು ನ್ಯಾಯಾಲಯದ ತೀರ್ಪು ಬಂದ ನಂತರ ಕಟ್ಟಿದ್ದೇವೆ, ನಾವು ಸಂವಿಧಾನಕ್ಕೆ ಗೌರವ ಕೊಡುವ ಪಕ್ಷದಲ್ಲಿದ್ದೇವೆ’ ಎಂದರು.
‘ಒಂದು ಕಾಲಕ್ಕೆ ಜಮ್ಮುಕಾಶ್ಮೀರದಲ್ಲಿ ಪ್ರತಿ ಮನೆಯ ಹಿಂದೂಗಳನ್ನು ಹೊರಗೆಳೆದು ಅವರನ್ನು ಮನೆಯಿಂದ ಹೊರ ಹಾಕುತ್ತಿದ್ದರು. ಮೋದಿ ಅಧಿಕಾರಕ್ಕೆ ಬಂದ ನಂತರ ಆರ್ಟಿಕಲ್ 370 ರದ್ದು ಮಾಡಿದ ನಂತರ ಅಲ್ಲಿನ ಹಿಂದೂಗಳು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ತ್ರಿವಳಿ ತಲಾಖ್ ನಿಷೇಧ ಮಾಡಿದ್ದರಿಂದ ಮುಸ್ಲಿಂ ಹೆಣ್ಣು ಮಕ್ಕಳೂ ಸಹ ನಮ್ಮೆದಿಯ ಜೀವನ ನಡೆಸುತ್ತಿದ್ದಾರೆ’ ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ. ಸುರೇಶ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ನೆಲಹೊನ್ನೆ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಅರಕೆರೆ ನಾಗರಾಜ್, ಶಿವಾನಂದ್ ಇದ್ದರು.