ದಾವಣಗೆರೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ರೂಪಿಸುತ್ತಿರುವ ‘ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ’ದ ಪ್ರಸ್ತಾವ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಮಹಾನಗರ ಪಾಲಿಕೆ ಕನ್ನಡ ಜಾಗೃತಿ ಸಮಿತಿ ಸಹಯೋಗದಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ, ಕನ್ನಡ ಕಾಯಕ ವರ್ಷದ ಸಮಾರೋಪ ‘ಕನ್ನಡ ನುಡಿ ನಡೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕನ್ನಡ ಭಾಷೆಯ ವಿಷಯದಲ್ಲಿ ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಕರ್ತವ್ಯವಿಲ್ಲ. ಕನ್ನಡ ಭಾಷೆಯ ವಿಚಾರದಲ್ಲಿರುವ ಹಲವಾರು ಕಾನೂನುಗಳನ್ನು ಒಟ್ಟುಗೂಡಿಸಿ, ಒಂದೇ ಚೌಕಟ್ಟಿನಡಿ ತರುವ ಕೆಲಸ ಇದಾಗಿದೆ. ಎರಡು ವರ್ಷಗಳಿಂದಲೂ ಈ ಪ್ರಯತ್ನ ನಡೆಯುತ್ತಿದ್ದು, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ಅದರ ಆಶಯಗಳು ಜಾರಿಗೆ ಬಂದರೆ ಕನ್ನಡಿಗರ ಭವಿಷ್ಯ ಉಜ್ವಲವಾಗುತ್ತದೆ’ ಎಂದು ತಿಳಿಸಿದರು.