ಹೊನ್ನಾಳಿ: ದೇಶದಲ್ಲಿ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್ಡಿಎ ಗೆಲುವು ಸಾಧಿಸಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಮೈತ್ರಿ ಪಕ್ಷದ 3 ಸ್ಥಾನಗಳು ಸೇರಿಕೊಂಡು ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್. ಪಕ್ಷದ ವರಿಷ್ಠರ ಮಧ್ಯಸ್ಥಿಕೆಯಿಂದ ಇದುವರೆಗೂ ಇದ್ದ ಸಣ್ಣ ಪುಟ್ಟ ಮನಸ್ತಾಪಗಳು ಬಗೆಹರಿದಿವೆ. ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿ’ ಎಂದು ಹೇಳಿದರು.
ಪಟ್ಟಣದ ದೇವನಾಯಕನಹಳ್ಳಿ ಸಮೀಪದ ವಾಣಿಹೊಂಡ ಶೋ ರೂಂ ಪಕ್ಕದ ಕಟ್ಟಡದಲ್ಲಿ ಏಪ್ರಿಲ್ 11ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿಯ ನೂತನ ಕಾರ್ಯಾಲಯ ಉದ್ಘಾಟನೆ ಮಾಡಲಾಗುವುದು ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ. ಸುರೇಶ್ ತಿಳಿಸಿದರು.
ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಸಂಸದ ಜಿ.ಎಂ. ಸಿದ್ದೇಶ್ವರ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಚುನಾವಣಾ ಉಸ್ತುವಾರಿ ಎಸ್.ಎ. ರವೀಂದ್ರನಾಥ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅವಳಿ ತಾಲ್ಲೂಕಿನ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಅವರು ಮನವಿ ಮಾಡಿದರು.
ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಕುಬೇರಪ್ಪ, ಮುಖಂಡರಾದ ದಿಡಗೂರು ಫಾಲಾಕ್ಷಪ್ಪ, ಅರಕೆರೆ ನಾಗರಾಜ್, ಡಿ.ಜಿ. ರಾಜಪ್ಪ, ನೆಲಹೊನ್ನೆ ಮಂಜುನಾಥ್, ಮಾರುತಿನಾಯ್ಕ, ಎಂ.ಎಸ್. ಫಾಲಾಕ್ಷಪ್ಪ, ಇಂಚರ ಮಂಜುನಾಥ್, ಧರ್ಮಪ್ಪ, ಬಾಬು ಹೋಬಳದಾರ್ ಹಾಜರಿದ್ದರು.