ಬಸವಾಪಟ್ಟಣ: ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಸಹಕಾರಿ ಎಂದು ಇಲ್ಲಿನ ಎಲ್.ಸಿದ್ಧಪ್ಪ ಪಿಯು ಕಾಲೇಜು ಪ್ರಾಂಶುಪಾಲ ಡಾ.ಪದ್ಮಪ್ಪ ಅಭಿಪ್ರಾಯಪಟ್ಟರು.
ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ನೂತನ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಉದ್ಘಾಟಿಸಿ ಅವರು ಮಾತನಡಿದರು.
ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಜನ ಸಂಪನ್ಮೂಲ ಹೊಂದಿದ್ದು, ಕ್ರೀಡೆ ಮತ್ತು ಸಾಂಸ್ಕೃತಿಕ ಕಲೆಗಳಲ್ಲಿ ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಮಕ್ಕಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹೇಳಿದರು.
‘ಶಾಲೆಯು ಪಾಠ ಪ್ರವಚನ ಅಲ್ಲದೇ ಪಠ್ಯೇತರ ಚಟುವಟಿಕೆಯಲ್ಲೂ ಸಾಧನೆ ಮಾಡಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ ನೂರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ಈಗಿನ ವಿದ್ಯಾರ್ಥಿಗಳು ಅವರನ್ನು ಮಾದರಿಯಾಗಿಟ್ಟುಕೊಂಡು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಯತ್ನಪಡಬೇಕು’ ಎಂದು ಜನತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಜಿ. ಮಂಜುನಾಥಸ್ವಾಮಿ ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಶಂಕರಪಾಟೀಲ್, ಖಜಾಂಚಿ ಎಚ್.ಹೊನ್ನಪ್ಪ, ನಿರ್ದೇಶಕ ಡಿ.ಎಚ್.ದಿನೇಶ್ ಮಾತನಾಡಿದರು.
ಜೀವ ವಿಮಾ ನಿಗಮದ ಪ್ರತಿನಿಧಿ ಕೆ.ರಾಜಶೇಖರ್, ಮುಖ್ಯ ಶಿಕ್ಷಕ ಹರಿಹರ ಪಟಗಾರ್ ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.