ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಯಲ್ಲಿ 77 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹ 103 ಕೋಟಿ ಪರಿಹಾರ ಮೊತ್ತ ಬಿಡುಗಡೆ ಮಾಡಲು ಸರ್ಕಾರಕ್ಕೆ ವರದಿ ನೀಡಲಾಗಿದೆ. ಆಯಾ ಗ್ರಾಮಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳಲ್ಲಿನ ಹೂಳನ್ನು ಕೂಡಲೇ ತೆಗೆಯಿಸಬೇಕು. ಕೆರೆ ಕಟ್ಟೆಗಳು ತುಂಬಿದ್ದು, ತುಂಬಿರುವ ಕೆರೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಬೇಕು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಸೂಚನೆ ಇದ್ದು, ಆಯಾ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಭಾಗಶಃ ಹಾನಿಗೊಳಗಾದ 146 ಮನೆಗಳ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಳ್ಳಲು ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.