ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ವಿತರಣೆ ಆಗಿಲ್ಲ: ಜಿಲ್ಲಾಧಿಕಾರಿ ಶಿವಾನಂದ

ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
Last Updated 22 ಸೆಪ್ಟೆಂಬರ್ 2022, 4:44 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆಯ ಸಂದರ್ಭದಲ್ಲಿ ದಾಖಲೆಗಳನ್ನು ಪರಿಶೀಲಿಸುವ ಮೂಲಕ ನೈಜ ಪರಿಶಿಷ್ಟ ಜಾತಿಯ ಜನರಿಗೆ ಪ್ರಮಾಣಪತ್ರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೇಡ ಜಂಗಮರ ಹೆಸರಿನಲ್ಲಿ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ನಕಲಿ ಎಸ್.ಸಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ. ಒಂದು ವೇಳೆ ಅರ್ಜಿ ಸಲ್ಲಿಸಿದ್ದರೂ ಆ ರೀತಿಯ ಅರ್ಜಿಗಳ ದಾಖಲೆಗಳನ್ನು ಖುದ್ದಾಗಿ ತಹಶೀಲ್ದಾರರು ಕೂಲಂಕಷವಾಗಿ ಪರಿಶೀಲಿಸಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನಕಲಿ ಎಸ್.ಸಿ ಪ್ರಮಾಣ ಪತ್ರ ಪಡೆದವರ ಮಾಹಿತಿ ದೊರೆತರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಗೆ ಯುವಕನೊಬ್ಬ ಮೊಬೈಲ್‍ನಲ್ಲಿ ಮೆಸೇಜ್ ಮಾಡಿದ ಎನ್ನುವ ಕಾರಣಕ್ಕಾಗಿ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಹಲ್ಲೆ ನಡೆಸಿದವರಲ್ಲಿ ಒಬ್ಬ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದು, ಆ ವ್ಯಕ್ತಿಯ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕುಂದುವಾಡ ಮಂಜುನಾಥ್ ಆಗ್ರಹಿಸಿದರು.

ಹಳೇ ಕುಂದವಾಡ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜಮೀನು ಇಲ್ಲದ ಕಡೆ ವಿಶೇಷ ಘಟಕ ಯೋಜನೆ ಅನುದಾನದಲ್ಲಿ ಕಾಲುವೆ ಕಾಮಗಾರಿ ನಡೆಸಲಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದೆ ಎಂದು ತಿಳಿಸಿದರು.

ವಸತಿಯುತ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಗುತ್ತಿಗೆ ಅಥವಾ ಪರ್ಯಾಯ ವ್ಯವಸ್ಥೆಯ ಮೂಲಕ ಶಿಕ್ಷಕರನ್ನು ನೇಮಕ ಮಾಡಬೇಕು. ಆಹಾರದ ಗುಣಮಟ್ಟದ ಬಗ್ಗೆಯೂ ಪರಿಶೀಲಿಸಬೇಕು ಎಂದು ನಾಗರಾಜ್ ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನ ಹೆಚ್ಚು ಇರುವ ಆನೆಕೊಂಡದ ಬಳಿ ಇರುವ ಮಟ್ಟಿಕಲ್ಲು ನಗರ ಪ್ರದೇಶದಲ್ಲಿ ಶೌಚಾಲಯ ಸಹಿತ ಮೂಲ ಸೌಕರ್ಯಗಳಿಲ್ಲ ಎಂದು ಆವರಗೆರೆ ವಾಸು ಮಾಹಿತಿ ನೀಡಿದರು.

ಜಗಳೂರು ತಾಲ್ಲೂಕಿನ ಮೂಡಲ ಮಾಚಿಕೆರೆ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮ ಮಾಡುವ ಮೂಲಕ ಅಪರಾಧ ಮುಕ್ತ ಗ್ರಾಮಗಳ ಘೋಷಣೆಗೆ ಮುಂದಾಗಬೇಕು ಎಂದು ಅರವಿಂದ್ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT