ಚನ್ನಗಿರಿ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ₹ 1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ಜೂನ್ 25ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಘಟಕದ ಪ್ರಾಯೋಗಿಕ ಪರೀಕ್ಷೆ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಅವರಿಂದಲೇ ಘಟಕವನ್ನು ಲೋಕಾರ್ಪಣೆಗೊಳಿಸಬೇಕು ಎಂಬುದು ನಮ್ಮ ಆಸೆಯಾಗಿದೆ. ಇನ್ನು ಎರಡು ಮೂರು ದಿನಗಳಲ್ಲಿ ಮುಖ್ಯಮಂತ್ರಿ ಅವರು ಭಾಗವಹಿಸುವ ಬಗ್ಗೆ ತಿಳಿಯಲಿದೆ’ ಎಂದು ಹೇಳಿದರು.
3ನೇ ಅಲೆಯನ್ನು ಎದುರಿಸಲು ಆರೋಗ್ಯ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ತಾಲ್ಲೂಕು ಕೇಂದ್ರದಲ್ಲಿ ಪ್ರತ್ಯೇಕ ಮಕ್ಕಳ ವಾರ್ಡ್ ಅನ್ನು ತೆರೆಯಲು ಸಿದ್ಧತೆ ನಡೆದಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಆಮ್ಲಜನಕ ಉತ್ಪಾದನಾ ಘಟಕದ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗದ ಕಾರಣ ಲಾಕ್ಡೌನ್ ಮುಂದುವರಿಯಲಿದೆ. ಗ್ರಾಮೀಣ ಪ್ರದೇಶಗಳ ಜನರು ಸಹಕಾರ ನೀಡದಿದ್ದರೆ ಕಠಿಣವಾದ ಲಾಕ್ಡೌನ್ ಜಾರಿಯಾಗುವ ಸಂಭವ ಇದೆ. ಆದ್ದರಿಂದ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ತಹಶೀಲ್ದಾರ್ ಪಟ್ಟರಾಜಗೌಡ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್, ಲೊಕೋಪಯೋಗಿ ಇಲಾಖೆ ಎಇಇ ವೈ.ಎನ್. ವಿಜಯ ಕುಮಾರ್, ಡಿವೈಎಸ್ಪಿ ಡಾ.ಸಂತೋಷ್, ಸಿಪಿಐ ಮಧು ಉಪಸ್ಥಿತರಿದ್ದರು.