ದಾವಣಗೆರೆ: ಅಯೋಧ್ಯೆಯಲ್ಲಿ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿರುವ ಹಿನ್ನೆಲೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಕಾರ್ಯಕರ್ತರು ಗುರುವಾರ ನಗರದಲ್ಲಿ ಕರಾಳ ದಿನವನ್ನು ಆಚರಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಿ.ಎಫ್.ಐ. ಜಿಲ್ಲಾ ಘಟಕದ ಅಧ್ಯಕ್ಷ ಫಯಾಜ್ ಅಹ್ಮದ್, ‘ಬಾಬರಿ ಮಸೀದಿಯನ್ನು ಪುನರ್ ನಿರ್ಮಿಸಬೇಕು. ಮಸೀದಿ ಧ್ವಂಸಗೊಳಿಸಿದ ಆರೋಪಿಗಳನ್ನು ಶಿಕ್ಷಿಸಬೇಕು. ನ್ಯಾಯಮೂರ್ತಿ ಲಿಬರ್ಹಾನ್ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.
ಘಟನೆ ನಡೆದು 26 ವರ್ಷಗಳು ಕಳೆದಿವೆ. ಮಸೀದಿ ಪುನರ್ ನಿರ್ಮಿಸುವುದಾಗಿ ಸರ್ಕಾರ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಈ ಘಟನೆಯ ಅಪರಾಧಿಗಳನ್ನು ಶಿಕ್ಷಿಸಿದಾಗ ಮಾತ್ರ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ. ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ. ನ್ಯಾಯದ ವಿಳಂಬವನ್ನು ನ್ಯಾಯದ ನಿರಾಕರಣೆ ಎಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಸುಪ್ರೀಂ ಕೋರ್ಟ್ ಶೀಘ್ರವೇ ಪ್ರಕರಣವನ್ನು ಇತ್ಯರ್ಥಗೊಳಿಸಬೇಕು ಎಂದು ಅವರು ಆಗ್ರಹಿಸಿದರು.