ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಕೂಡಲಸಂಗಮ ಶ್ರೀಗಳಿಂದ ರಾಜಕಾರಣ: ಮುರುಗೇಶ ನಿರಾಣಿ

Last Updated 14 ಜನವರಿ 2023, 12:55 IST
ಅಕ್ಷರ ಗಾತ್ರ

ದಾವಣಗೆರೆ: ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟದಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಸಚಿವ ಮುರುಗೇಶ ನಿರಾಣಿ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ, ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಶಾಂತಿಯುತವಾಗಿ ಮನವಿ ಸಲ್ಲಿಸಿ ಮೀಸಲಾತಿ ಪಡೆದುಕೊಂಡಿದ್ದಾರೆ. ಆದರೆ, ನಮ್ಮ ಸಮಾಜದ ಸ್ವಾಮೀಜಿ ಬಾರುಕೋಲು ಚಳವಳಿ, ವಿಧಾನಸೌಧ ಮುತ್ತಿಗೆ, ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತಿದ್ದಾರೆ. ಸಚಿವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಈ ವ್ಯತ್ಯಾಸಗಳನ್ನು ನೋಡಿದರೆ ಕೂಡಲಸಂಗಮದ ಸ್ವಾಮೀಜಿ ಶೇಕಡ 100ರಷ್ಟು ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ’ ಎಂದು ಟೀಕಿಸಿದರು.

‘ಕಾಂಗ್ರೆಸ್ ಸರ್ಕಾರ ಇದ್ದಾಗ ಅಂದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ ಅವರು 2ಎ ಮೀಸಲಾತಿ ನಿರಾಕರಿಸಿದ್ದರು. ಆಗ ಈ ಸ್ವಾಮೀಜಿ ಎನು ಮಾಡುತ್ತಿದ್ದರು? ಈಗ ನಾವು ಮೀಸಲಾತಿ ಬಗ್ಗೆ ಹಂತಹಂತವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ. ಹೀಗಿದ್ದರೂ ಸ್ವಾಮೀಜಿ ಹಗುರವಾಗಿ ಮಾತನಾಡುತ್ತಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.

ಕಣ್ಣೀರು ಹಾಕಿದ ನಿರಾಣಿ: ಬಸನಗೌಡ ಪಾಟೀಲ ಯತ್ನಾಳ್‌ ಅವರು ತಮ್ಮ ಬಗ್ಗೆ ಅಸಂವಿಧಾನಿಕ ಪದಗಳನ್ನು ಆಡಿದ್ದರಿಂದ ಭಾವುಕರಾದ ನಿರಾಣಿ, ‘ಬಿಜೆಪಿಯಲ್ಲಿ ಗೌರವ ಇಲ್ಲ ಎಂದರೆ, ಯಾಕೆ ಇದ್ದೀರಿ? ಪಕ್ಷದಿಂದ ಹೊರಗೆ ಹೋಗಿ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT