ದಾವಣಗೆರೆ: ಅಂಕಪಟ್ಟಿಯ ಆಧಾರದ ಮೇಲೆ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಧರಿಸಬಾರದು. ಮಕ್ಕಳಿಗೆ ಆಸಕ್ತಿಕರ ಕ್ಷೇತ್ರದಲ್ಲಿ ಸಾಧನೆ ಮಾಡಲು ಪೋಷಕರು ಉತ್ತೇಜಿಸಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ಸಲಹೆ ನೀಡಿದರು.
ನಗರದ ಸಿದ್ಧಗಂಗಾ ಶಾಲೆಯ ಆವರಣದಲ್ಲಿ ಸೋಮವಾರ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಏರ್ಪಡಿಸಿದ್ದ ಕನ್ನಡ ಕೌಸ್ತುಭ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯು ಜೀವನದ ಮಹತ್ವದ ಘಟ್ಟವಾಗಿದ್ದು, ಇದರಲ್ಲಿ ಹೆಚ್ಚು ಅಂಕ ಪಡೆಯುವುದಷ್ಟೇ ಸಾಧನೆಯಲ್ಲ. ಮುಂದಿನ ಸಾಧನೆಯ ಹಾದಿಗೆ ಇದು ಮೈಲಿಗಲ್ಲಾಗಬೇಕು. ಕಡಿಮೆ ಅಂಕ ಪಡೆದ ಮಾತ್ರಕ್ಕೆ ವಿದ್ಯಾರ್ಥಿಗಳ ಸಾಮರ್ಥ್ಯ ಕೀಳಂದಾಜಿಸಬಾರದು. ಓದಿನಲ್ಲಿ ಹಿನ್ನಡೆ ಅನುಭವಿಸಿದರೂ, ಜೀವನದಲ್ಲಿ ಸಾಧನೆ ಮಾಡಿದವರಿದ್ದಾರೆ ಎಂದರು.
2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಕನ್ನಡ ಕೌಸ್ತುಭ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.