ದಾವಣಗೆರೆ: ಕೊರೊನಾ ತಡೆಗೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸುರಕ್ಷತಾ ಕಿಟ್, ತಿಂಗಳಿಗೆ ₹ 12 ಸಾವಿರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಕೆಲಸ ಬಹಿಷ್ಕರಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
‘ಜನವರಿಯಿಂದ 10 ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಕನಿಷ್ಠ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವ ಪ್ರಸ್ತಾಪವನ್ನೂ ಮಾಡಿಲ್ಲ. ಅನಿವಾರ್ಯವಾಗಿ ಕೆಲಸ ಬಹಿಷ್ಕರಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತಿದೆ. ಸರ್ಕಾರ ಶೀಘ್ರ ನಮ್ಮ ಬೇಡಿಕೆ ಈಡೇರಿಸಬೇಕು. ಕೊರೊನಾ ತಡೆಗಾಗಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದು, ಸರ್ಕಾರ ಕನಿಷ್ಠ ಸುರಕ್ಷತಾ ಕಿಟ್ ನೀಡಿಲ್ಲ. ಕೊರೊನಾ ಸಂಕಷ್ಟದಲ್ಲೂ ಸರ್ಕಾರ ನಮ್ಮನ್ನು ಕಡೆಗಣಿಸಿರುವುದು ಅಕ್ಷಮ್ಯ’ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಡಿಎಚ್ಒ ರಾಘವೇಂದ್ರಸ್ವಾಮಿ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ತಾಲ್ಲೂಕು ಸಹ ಸಂಚಾಲಕರಾದಅನಿತಾ ಆನಗೋಡು, ಭಾರತಿ ಕೆ., ಮಂಜುನಾಥ ಕುಕ್ಕವಾಡ, ಸೌಮ್ಯಾ, ಸ್ಮಿತಾ, ನೀಲಮ್ಮ, ನಿರ್ಮಲಾ, ದುರ್ಗಮ್ಮ, ಶಕುಂತಲ, ನಾಗರತ್ನಾ, ರುಕ್ಕಮ್ಮ, ಆಶಾ, ನೇತ್ರಾವತಿ, ಪುಷ್ಪ ಇದ್ದರು.