ದಾವಣಗೆರೆ: ಹುಳಿಯಾರು ಪಟ್ಟಣದಲ್ಲಿ ವೃತ್ತಕ್ಕೆ ಕನಕದಾಸರ ಹೆಸರಿಡುವ ವಿಚಾರದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹೊಸದುರ್ಗದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಅವಮಾನಿಸಿದ್ದಾರೆ ಎನ್ನಲಾದ ವಿವಾದವು ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕಾಗಿನೆಲೆ ಗುರುಪೀಠದ ಶಾಖಾ ಮಠದಲ್ಲಿ ಗುರುವಾರ ಸುಖಾಂತ್ಯಗೊಂಡಿತು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಾಧುಸ್ವಾಮಿ, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ನಡುವೆ ಮಠದಲ್ಲಿ ಸುಮಾರು ಒಂದು ಗಂಟೆ ಕಾಲ ನಡೆದ ಸಂಧಾನ ಸಭೆ ಯಶಸ್ವಿಯಾಯಿತು.
ಹುಳಿಯಾರು ಪಟ್ಟಣದ ವೃತ್ತಕ್ಕೆ ಕನಕದಾಸ ವೃತ್ತ ಎಂದು ನಾಮಕರಣ ಮಾಡಲು ಸಚಿವರು ಒಪ್ಪಿಗೆ ಸೂಚಿಸಿದರು. ಸ್ವಾಮೀಜಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಬಳಿಕ ಸ್ವಾಮೀಜಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವಂತೆ ಹಾಲುಮತ ಸಮಾಜಕ್ಕೆ ಸೂಚಿಸಿದರು.
‘ನಾನು ಯಾವುದೇ ಸ್ವಾಮೀಜಿ ಹಾಗೂ ಯಾವುದೇ ಸಮಾಜವನ್ನು ನಿಂದಿಸುವ ವ್ಯಕ್ತಿಯಲ್ಲ. ಅಂದು ಸಭೆಗೆ ಅಡಚಣೆಯಾದಾಗ ಏರುಧ್ವನಿಯಲ್ಲಿ ಮಾನತನಾಡಿದ್ದೆ. ಸಂವಹನ ಕೊರತೆಯಿಂದಾಗಿ ಇದನ್ನೇ ತಪ್ಪಾಗಿ ಅರ್ಥೈಸಲಾಗಿತ್ತು. ಇದೀಗ ಸ್ವಾಮೀಜಿ ಜೊತೆ ಮಾತನಾಡಿದ್ದರಿಂದ ನನ್ನ ಮನಸ್ಸು ಹಗುರುವಾಗಿದೆ’ ಎಂದು ಸಭೆಯ ಬಳಿಕ ಮಾಧುಸ್ವಾಮಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
‘ಮಾಧುಸ್ವಾಮಿ ಹೇಳಿಕೆ ಬಗ್ಗೆ ಇದ್ದ ಗೊಂದಲಗಳು ದೂರವಾಗಿವೆ. ಈಗ ಎಲ್ಲವೂ ಸರಿ ಹೋಗಿದೆ. ಪ್ರತಿಭಟನೆ ಹಾಗೂ ಬಂದ್ ಹಿಂದಕ್ಕೆ ಪಡೆಯುತ್ತಿದ್ದೇವೆ. ಹಾಲುಮತ ಸಮಾಜದವರು ಸಚಿವರ ವಿರುದ್ಧ ಪ್ರತಿಭಟನೆ ನಡೆಸಬಾರದು’ ಎಂದು ನಿರಂಜನಾನಂದಪುರಿ ಸ್ವಾಮೀಜಿ ಮನವಿ ಮಾಡಿದರು.
ಉಪಚುನಾವಣೆ ಹಿನ್ನೆಲೆಯಲ್ಲಿ ಹಾಲುಮತ ಸಮಾಜದ ವಿರೋಧ ಕಟ್ಟಿಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಈ ವಿವಾದ ಎದ್ದಾಗ ಕ್ಷಮೆಯಾಚಿಸಿದ್ದರು. ಮಾಧುಸ್ವಾಮಿ ಜೊತೆ ಮಾತನಾಡಿ, ಸಂಧಾನ ಮಾಡಿಸುವಂತೆ ಬಸವರಾಜ ಬೊಮ್ಮಾಯಿ ಅವರನ್ನು ಕಳುಹಿಸಿಕೊಟ್ಟಿದ್ದರು.
ಸಚಿವರ ಹೇಳಿಕೆಯಿಂದಾಗಿ ಕುರುಬ ಸಮುದಾಯದವರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.