ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಸತೀಶ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ

Published 21 ಆಗಸ್ಟ್ 2023, 16:13 IST
Last Updated 21 ಆಗಸ್ಟ್ 2023, 16:13 IST
ಅಕ್ಷರ ಗಾತ್ರ

ದಾವಣಗೆರೆ: ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ಪೂಜಾರಿ ಬಂಧನ ಖಂಡಿಸಿ ಹಾಗೂ ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಘಟಕದಿಂದ ನಗರದ ಜಯದೇವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಸತೀಶ್ ಪೂಜಾರಿ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಟೈರ್‌ಗೆ ನೀರು ಹಾಕಿ ನಂದಿಸಲು ಪ್ರಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ಉಂಟಾಯಿತು. ಇದಾದ ಬಳಿಕ ಪ್ರತಿಭಟನಕಾರರು ಕಾಲ್ನಡಿಗೆ ಮೂಲಕ ನಗರದ ಉಪ ವಿಭಾಗಾಧಿಕಾರಿ ಕಚೇರಿಗೆ ತಲುಪಿ ಎಸಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

‘ಆ.14ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಆಯೋಜಿಸಲಾಗಿದ್ದ ‘ಅಖಂಡ ಭಾರತ ಸಂಕಲ್ಪ’ ಕಾರ್ಯಕ್ರಮದಲ್ಲಿ ಸತೀಶ್ ಪೂಜಾರಿ ಅವರು ದಿಕ್ಸೂಚಿ ಭಾಷಣವನ್ನು ಮಾಡಿದ್ದರು. ಈ ಭಾಷಣದಲ್ಲಿ ಭಾರತದಲ್ಲಿ 1947ರ ಮಧ್ಯರಾತ್ರಿಯಲ್ಲಿ ನಡೆದ ಭಾರತದ ವಿಭಜನೆ ಮತ್ತು ವಿಭಜನೆಗೆ ಮೊದಲು ಈ ದೇಶದಲ್ಲಿ ಏನೇನು ಘಟನೆಗಳು ಘಟಿಸಿತು ಅನ್ನುವ ಸತ್ಯ ಸಂಗತಿಗಳನ್ನು ಜನರಿಗೆ ವಿವರಿಸಿದ್ದರಷ್ಟೇ. ಆದರೆ ಪೊಲೀಸರು ಪ್ರಚೋದನಕಾರಿ ಭಾಷಣದ ಆರೋಪ ಮಾಡಿ ಅವರನ್ನು ಬಂಧಿಸಿದ್ದಾರೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಹಿಂದೂಗಳಿಗೆ ವಾಕ್ ಸ್ವಾತಂತ್ರ ಇಲ್ಲದಂತಾಗಿದೆ. ಇರುವ ಸತ್ಯಸಂಗತಿಗಳನ್ನು ಹೇಳಿದರೆ ಪ್ರಕರಣ ದಾಖಲಿಸಿ ಹಿಂದೂಗಳನ್ನು ಹತ್ತಿಕ್ಕುವಂತಹ ವಾತಾವರಣ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನೀತಿಗೆ ಈ ಪ್ರಕರಣ ಕೈಗನ್ನಡಿಯಾಗಿದ್ದು, ಸತ್ಯ ಸಂಗತಿಗಳನ್ನು ಮಾತನಾಡುವ ಸಾಮಾಜಿಕ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಾನಸಿಕ ಸ್ಥೈರ್ಯ ಕುಗ್ಗಿಸುವ, ದಮನಿಸುವ ಪ್ರಯತ್ನಗಳನ್ನು  ಮಾಡುತ್ತಿದ್ದು, ಇವರಿಗೆ ಅವರದೇ ಭಾಷೆಯಲ್ಲಿ ಉತ್ತರವನ್ನು ಕೊಡುವ ಸಾಮರ್ಥ್ಯ ಸಂಘಟನೆಗಿದೆ' ಎಂದು ಎಚ್ಚರಿಸಿದರು.

‘ಕೂಡಲೇ ಹಿಂದೂ ವಿರೋಧಿ ನಡೆಯನ್ನು ಸರ್ಕಾರ ನಿಲ್ಲಿಸಬೇಕು. ಹಾಗೊಂದು ವೇಳೆ ಇನ್ನು ಮುಂದೆ ಸಂಘಟನೆಯ ಕಾರ್ಯಕರ್ತರನ್ನು ಕೆಣಕಿದರೆ, ಅವರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಯಾವುದೇ ರೀತಿಯ ಕೆಲಸಗಳು ನಡೆದರೆ ಸಂಘಟನೆ ಒಂದು ಸಮಾಜವಾಗಿ ಉತ್ತರವನ್ನು ಕೂಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗುತ್ತದೆ’ ಎಂದು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ ಮಾಜಿ ಮುಖ್ಯ ಸಚೇತಕ  ಎ.ಎಚ್. ಶಿವಯೋಗಿಸ್ವಾಮಿ, ಧೂಡಾ ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಕೆ.ಎಂ. ಸುರೇಶ್, ಮುಖಂಡರಾದ ಶ್ರೀನಿವಾಸ್ ದಾಸಕರಿಯಪ್ಪ, ಕೆ.ಎಂ. ವೀರೇಶ್, ಶಿವರಾಜ್ ಪಾಟೀಲ್, ವೈ. ಮಲ್ಲೇಶ್, ಪವನ್ ರೇವಣಕರ್, ಶಿವನಗೌಡ ಪಾಟೀಲ್, ಸಚಿನ್ ವರ್ಣೇಕರ್ ಸೇರಿದಂತೆ ನೂರಾರು ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ವೇಳೆ ಸಂಚಾರ ದಟ್ಟಣೆಯಾಗಿ ಜನರು ಪರದಾಡಿದರು. 
ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ವೇಳೆ ಸಂಚಾರ ದಟ್ಟಣೆಯಾಗಿ ಜನರು ಪರದಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT