ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯ

ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ
Last Updated 4 ನವೆಂಬರ್ 2022, 5:30 IST
ಅಕ್ಷರ ಗಾತ್ರ

ಹರಿಹರ: ಹಿಂದಿನ ಶೈಕ್ಷಣಿಕ ಸಾಲಿನ ಬಾಕಿ ಇರುವ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಯುಯುಸಿಎಂಎಸ್ ತಂತ್ರಾಂಶ ಸರಿಪಡಿಸಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಗುರುವಾರ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಧ.ರಾ.ಮ ಕಾಲೇಜು ಆವರಣದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಕಾರರು ಪ್ರಮುಖ ರಸ್ತೆಗಳ ಮೂಲಕ ಮಹಾತ್ಮ ಗಾಂಧಿ ವೃತ್ತಕ್ಕೆ ಬಂದು ಕೆಲ ಸಮಯ ಮಾನವ ಸರಪಳಿ ರಚಿಸಿದರು. ನಂತರ ತಾಲ್ಲೂಕು ಕಚೇರಿಗೆ ಬಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವತ್ಥ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು.

ನಂತರ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕೊಳ್ಳೆರ ಮಾತನಾಡಿ, ‘2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆಲ್ಲರಿಗೂ ವಿದ್ಯಾರ್ಥಿ ವೇತನ ನೀಡಿಲ್ಲ. ಇದರಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಹಣಕಾಸಿನ ತೊಂದರೆ ಎದುರಾಗಿದೆ. ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಆಧರಿಸಿ ಶಿಕ್ಷಣ ಪಡೆಯುತ್ತಿದ್ದಾರೆ. ಅಂತಹವರಿಗೆ ಶಿಕ್ಷಣ ಮುಂದುವರಿಸಲು ಅಡಚಣೆ ಉಂಟಾಗಿದೆ. ಸರ್ಕಾರ ಸಬೂಬುಗಳನ್ನು ಹೇಳದೇ ಉಳಿದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಎಲ್ಲ ವಿಶ್ವವಿದ್ಯಾಲಯಗಳು ಯುಯುಸಿಎಂಎಸ್ ತಂತ್ರಾಂಶ ಬಳಸಿ ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲ ರೀತಿಯ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಿದೆ. ಆದರೆ ಈ ತತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದಾಗಿ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ. ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶವನ್ನು ನೀಡದಿರುವುದರಿಂದ ಹಲವು ರೀತಿಯ ಸಮಸ್ಯೆಗಳನ್ನು ರಾಜ್ಯದ ವಿದ್ಯಾರ್ಥಿ ಸಮೂಹ ಎದುರಿಸುತ್ತಿದೆ. ಕೂಡಲೇ ಯುಯುಸಿಎಂಎಸ್ ತಂತ್ರಾಂಶ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೊಟ್ರೇಶ್, ನಗರ ಸಹ ಕಾರ್ಯದರ್ಶಿ ವಿನಯ್ ಹಾಗೂ ನೂರಾರು
ವಿದ್ಯಾರ್ಥಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT