ದಾವಣಗೆರೆ: ದೆಹಲಿಯ ತಿಸ್ ಹಜಾರಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದ ಸದಸ್ಯರು ಕಾರ್ಯಕಲಾಪಗಳಿಂದ ದೂರ ಉಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ದೆಹಲಿಯಲ್ಲಿ ವಕೀಲರ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯು ಅಮಾನವೀಯ ಹಾಗೂ ಕಾನೂನು ಕೈಗೆತ್ತಿಕೊಂಡಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ಕಾನೂನು ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ಪ್ರಧಾನಮಂತ್ರಿ, ಗೃಹ ಸಚಿವರು ಹಾಗೂ ರಾಷ್ಟ್ರಪತಿಗಳು ವಕೀಲರ ರಕ್ಷಣೆಯ ಬಗ್ಗೆ ಕಾಯ್ದೆ ಜಾರಿಗೆ ಬರುವಂತೆ ಕಾನೂನು ರೂಪಿಸಿ ವಕೀಲರಿಗೆ ರಕ್ಷಣೆ ನೀಡಬೇಕು. ಕಾನೂನು ಉಲ್ಲಂಘನೆ ಮಾಡಿರುವ ಪೊಲೀಸರನ್ನು ತಕ್ಷಣ ವಜಾ ಮಾಡಬೇಕು ಹಾಗೂ ವಕೀಲರಿಗೆ ಧೈರ್ಯ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.