ದಾವಣಗೆರೆ: ಹಾನಿಗೊಳಗಾದ ಕಬ್ಬು ಬೆಳೆಗೆ ಸೂಕ್ತ ಪರಿಹಾರ, ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಒದಗಿಸುವಂತೆ ಒತ್ತಾಯಿಸಿ ನಗರದ ಸ್ವಾಭಿಮಾನಿ ಬಳಗದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿಪತ್ರ ಸಲ್ಲಿಸಲಾಯಿತು.
‘ಜಿಲ್ಲೆಯ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಕೆಲವು ರೈತ ಮುಖಂಡರು ಸೂಕ್ತ ಪರಿಹಾರ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ 2,070 ಎಕರೆ ಕಬ್ಬು ಒಣಗಿ ನಾಶವಾಗಿದ್ದು, ಕಳೆದ ವರ್ಷ ಜೂನ್ನಿಂದ ನವೆಂಬರ್ ಅವಧಿಯಲ್ಲಿ ರೈತರು ಕಬ್ಬಿನ ನಾಟಿ ಮಾಡಿದ್ದರು. ನಿರೀಕ್ಷಿತ ಬೆಳೆ ಕೈಗೆ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಅವರ ನೆರವಿಗೆ ಧಾವಿಸಿ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿ ಬಳಗದ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಅವರಿಗೆ ಮನವಿ ಸಲ್ಲಿಸಿದರು.
‘ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಮಳೆ ಪ್ರಾರಂಭವಾಗಿದ್ದು ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಜಿಲ್ಲಾಡಳಿತ ಕ್ರಮ ವಹಿಸಬೇಕು. ಕಾಳಸಂತೆಯಲ್ಲಿ ಮಾರಾಟ ಮಾಡುವವರ ಮೇಲೆ ನಿಗಾ ವಹಿಸಬೇಕು’ ಎಂದು ಆಗ್ರಹಿಸಿದರು.
‘ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ರೈತರ ಕುಂದು–ಕೊರತೆಗಳನ್ನು ಆಲಿಸಿ, ಸಮಸ್ಯೆ ಪರಿಹರಿಸಬೇಕು’ ಎಂದು ಆಗ್ರಹಿಸಿದರು.