ದಾವಣಗೆರೆ: ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಚಾಲನೆ ನೀಡಲಾಗಿದ್ದು, ಜಿಲ್ಲೆಯಲ್ಲಿ ನೋಂದಣಿ ಆರಂಭವಾಗಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 5000 ವಿದ್ಯಾರ್ಥಿಗಳು ಪದವಿ, ಡಿಪ್ಲೊಮಾ ಪೂರೈಸಿದ್ದಾರೆ ಎಂದು ಅಂದಾಜಿಸಲಾಗಿದೆ.
‘ಯುವ ನಿಧಿ’ ಯೋಜನೆಯ ಅನುಷ್ಠಾನ ಕುರಿತ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪೋಸ್ಟರ್ ಬಿಡುಗಡೆಗೊಳಿಸಿದರು.
‘ಈಗಾಗಲೇ 4 ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರ 5ನೆಯ ಯೋಜನೆಗೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಪದವಿ ಪಡೆದು ನಿರುದ್ಯೋಗಿಗಾಗಿರುವ ಯುವಕ–ಯುವತಿಯರಿಗೆ ಈ ಯೋಜನೆಯ ಮೂಲಕ ಸರ್ಕಾರದಿಂದ ಧನಸಹಾಯ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
‘ಕರ್ನಾಟಕ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ 2023ರಲ್ಲಿ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವವರು ಈ ಯೋಜನೆಗೆ ಅರ್ಹರಾಗಿದ್ದು, ಪದವಿ ಮುಗಿದ 6 ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಪದವೀಧರರಿಗೆ ₹3000 ಹಾಗೂ ಡಿಪ್ಲೊಮಾ ಪೂರೈಸಿದವರಿಗೆ ₹1500ಗಳನ್ನು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ 2 ವರ್ಷಗಳ ಅವಧಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮಾಡಲಾಗುವುದು’ ಎಂದು ಹೇಳಿದರು.
‘ಪದವೀಧರರು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭ, ವಿಳಾಸ, ವಯಸ್ಸು, ಆಧಾರ್ ಹಾಗೂ ಬ್ಯಾಂಕ್ ಖಾತೆಯ ಸಂಖ್ಯೆಗಳನ್ನು ನೀಡಬೇಕು. ಅರ್ಜಿ ಸಲ್ಲಿಸಿದ ಬಳಿಕ ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿ ಹಾಗೂ ಡಿಜಿ ಲಾಕರ್ ಮೂಲಕ ದಾಖಲೆ ಪರಿಶೀಲಿಸಿದ ಬಳಿಕ ಹಣ ಜಮಾ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.
‘ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 5000 ವಿದ್ಯಾರ್ಥಿಗಳು ಪದವಿ, ಡಿಪ್ಲೊಮಾ ಪೂರೈಸಿದ್ದಾರೆ ಎಂದು ಅಂದಾಜಿಸಿದ್ದು, ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದಾಗ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ಅನ್ಯ ಜಿಲ್ಲೆಯವರು ದಾವಣಗೆರೆಯಲ್ಲಿ ವ್ಯಾಸಂಗ ಮಾಡಿದ್ದರೆ, ಇಲ್ಲವೇ ದಾವಣಗೆರೆಯವರು ಬೇರೆ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡಿದ್ದರೆ ಸ್ವಂತ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಬಹುದು’ ಎಂದು ಹೇಳಿದರು.
ಉದ್ಯೋಗ ಪಡೆದವರು ಸತ್ಯ ಮರೆಮಾಚಿ ಧನಸಹಾಯ ಪಡೆಯುತ್ತಿದ್ದರೆ, ಅಂತಹವರ ವಿರುದ್ಧ ದೂರು ನೀಡಿದರೆ ಉದ್ಯೋಗಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಧನಸಹಾಯ ರದ್ದು ಮಾಡಲಾಗುವುದು. ಯಾವುದೇ ಕಂಪನಿಯಲ್ಲಿ ಉದ್ಯೋಗ ಪಡೆದರೆ ಆಧಾರ್ ಜೋಡಣೆ ಮಾಡಿರುವುದರಿಂದ ಇಎಸ್ಐ, ಪಿಎಫ್ ಪಡೆಯುತ್ತಿರುವ ಬಗ್ಗೆ ಮಾಹಿತಿ ಸಿಗುತ್ತದೆ’ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಉದ್ಯೋಗ ಮೇಳ ಆಯೋಜಿಸಲಿದ್ದು, ಕಳೆದ ಬಾರಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸಾವಿರಾರು ಜನರಿಗೆ ಉದ್ಯೋಗ ಲಭಿಸಿದ್ದು, ಜನವರಿ ತಿಂಗಳಲ್ಲಿ ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು’ ಎಂದು ಡಾ.ಎಂ.ವಿ.ವೆಂಕಟೇಶ್ ಮಾಹಿತಿ ನೀಡಿದರು.
‘ಗ್ರಾಮ ಮಟ್ಟದಲ್ಲಿ ಬಾಪೂಜಿ ಸೇವಾ ಕೇಂದ್ರದಲ್ಲಿ ಮಂಗಳವಾರದಿಂದಲೇ ಅರ್ಜಿಗಳನ್ನು ಸ್ವೀಕರಿಸಲಾಗುವುದು’ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ತಿಳಿಸಿದರು.
ಎಡಿಸಿ ಪಿ.ಎನ್.ಲೋಕೇಶ್, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಡಿ., ಕೌಶಲಾಭಿವೃದ್ಧಿ ಅಧಿಕಾರಿ ಬಸವನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.