ಚನ್ನಗಿರಿ: ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕೆರೆಕಟ್ಟೆಗಳು ತುಂಬಿವೆ. ಹಾಗಾಗಿ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗುವುದಿಲ್ಲ ಎಂಬ ನಂಬಿಕೆ ಇದೆ. ಆದರೂ ರೈತರ ಪಂಪ್ಸೆಟ್ಗಳಿಗೆ ಗುಣಮಟ್ಟದ 6 ಗಂಟೆ ವಿದ್ಯುತ್ ಸರಬರಾಜು ಮಾಡುವಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಬೆಸ್ಕಾಂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಬೆಂಕಿಕೆರೆ ಬಳಿ ₹ 125 ಕೋಟಿ ವೆಚ್ಚದಲ್ಲಿ 200 ಕೆವಿ ವಿದ್ಯುತ್ ಕೆಂದ್ರವನ್ನು ಸ್ಥಾಪಿಸಲಾಗಿದೆ. ಕೆಲ ಗ್ರಾಮಗಳಲ್ಲಿ ಹೆಚ್ಚಿನ ಪರಿಹಾರಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಗೋಪುರ ಅಳವಡಿಕೆ ಕಾಮಗಾರಿಗೆ ತಡೆ ಒಡ್ಡಿದ್ದರು. ಗ್ರಾಮಗಳ ಜನರ ಮನವೊಲಿಸಿ ಗೋಪುರಗಳ ಅಳವಡಿಕೆ ಕಾರ್ಯವನ್ನು ಮಾಡಲಾಗಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಬೇಗ ಮುಕ್ತಾಯಗೊಳಿಸಬೇಕು. ಇನ್ನೆರಡು ತಿಂಗಳಲ್ಲಿ ಕೆಂದ್ರವನ್ನು ಮುಖ್ಯಮಂತ್ರಿ ಅವರು ಲೋಕಾರ್ಪಣೆಗೊಳಿಸುವರು. ಕೇಂದ್ರದ ಪ್ರಾರಂಭದಿಂದ ವಿದ್ಯುತ್ ಸಮಸ್ಯೆ ನಿವಾರಣೆಯಾಗಲಿದೆ. ರೈತರಿಗೆ ಗುಣಮಟ್ಟದ ವಿದ್ಯುತ್ ನೀಡಲು ಸಾಧ್ಯವಾಗಲಿದೆ ಎಂದರು.
ಪ್ರಸ್ತುತ ಹಗಲು 2 ಗಂಟೆ ಹಾಗೂ ರಾತ್ರಿ 3 ಗಂಟೆ ಸೇರಿ ಒಟ್ಟು 5 ಗಂಟೆ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದನ್ನು ಬದಲಾಯಿಸಿ ಹಗಲು 3 ಹಾಗೂ ರಾತ್ರಿ 3 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಬೇಕು. ರೈತರಿಂದ ದೂರುಗಳು ಬಾರದ ರೀತಿಯಲ್ಲಿ ಅವರ ಕಷ್ಟಗಳಿಗೆ ನೆರವಾಗಬೇಕು. ರೈತರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.