ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾಳಿ | ಅವಳಿ ತಾಲ್ಲೂಕುಗಳ ಅಭಿವೃದ್ಧಿಗೆ ₹ 60 ಕೋಟಿ: ಶಾಸಕ ಡಿ.ಜಿ. ಶಾಂತನಗೌಡ

Published 7 ಮಾರ್ಚ್ 2024, 16:24 IST
Last Updated 7 ಮಾರ್ಚ್ 2024, 16:24 IST
ಅಕ್ಷರ ಗಾತ್ರ

ಹೊನ್ನಾಳಿ: ‘ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹ 60 ಕೋಟಿ ಅನುದಾನ ಬಿಡುಗಡೆ ಮಾಡಿದೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ ₹ 20 ಕೋಟಿ, ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗಾಗಿ ₹ 20 ಕೋಟಿ ಮುಜರಾಯಿ ಇಲಾಖೆಯ ದೇವಸ್ಥಾನಗಳ ಅಭಿವೃದ್ದಿಗೆ ₹ 5 ಕೋಟಿ, ಅಲ್ಪಸಂಖ್ಯಾತ ಇಲಾಖೆಗೆ ₹ 5 ಕೋಟಿ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ₹ 10 ಕೋಟಿ ಸೇರಿ ಒಟ್ಟು ₹ 60 ಕೋಟಿ ಅನುದಾನ ನೀಡಿದೆ’ ಎಂದು ಹೇಳಿದರು.

ಅವಳಿ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಯಾವುದೇ ಹಣದ ಕೊರತೆ ಇಲ್ಲ. ಈ ಸಂಬಂಧ ₹ 90 ಲಕ್ಷ ಈಗಾಗಲೇ ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ಜಿಲ್ಲೆಗೆ ₹ 2 ಕೋಟಿ ಅನುದಾನ ಬಿಡುಗಡೆಯಾಗಿದೆ. ಅವಳಿ ತಾಲ್ಲೂಕಿನ 13 ಹಳ್ಳಿಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಯಿಸಲಾಗಿದೆ. ತಾಲ್ಲೂಕಿನಲ್ಲಿ ತಿಂಗಳಿಗಾಗುವಷ್ಟುಮೇವು ದಾಸ್ತಾನು ಇದೆ ಎಂದರು.

ಬೇಸಿಗೆ ಹಂಗಾಮಿನಲ್ಲಿ 9775 ಬಿತ್ತನೆ ಗುರಿ ಹೊಂದಲಾಗಿದ್ದು, ಒಟ್ಟು 3710 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಪ್ರಸ್ತುತ ವರ್ಷದಲ್ಲಿ ನೀರಾವರಿ ಯೋಜನೆಯಡಿ ಸಾಮಾನ್ಯ ರೈತರಿಗೆ ₹ 301 ಲಕ್ಷ ವಿಶೇಷ ಘಟಕ ಯೋಜನೆಯಡಿ ₹ 60 ಲಕ್ಷ ಹಾಗೂ ಗಿರಿಜನ ಉಪಯೋಗ ಯೋಜನೆಯಡಿ ₹ 19.5 ಲಕ್ಷ ಕ್ರಿಯಾಯೋಜನೆ ತಯಾರಿಸಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಪ್ರತಿಮಾ ತಿಳಿಸಿದರು.


ಬಿ.ಸಿ.ಎಂ. ಇಲಾಖೆಗೆ ಸೇರಿದ ಮೂರು ವಸತಿನಿಲಯಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಮಕ್ಕಳಿಗೆ ಕುಡಿಯುವ ನೀರಿಗೆ ಬಹಳ ತೊಂದರೆಯಾಗಿದೆ ಎಂದು ಬಿಸಿಎಂ ಅಧಿಕಾರಿ ಮೃತ್ಯುಂಜಯ ಅವರು ಹೇಳಿದರು.

ಸಮಾಜಕಲ್ಯಾಣ ಇಲಾಖೆಯ 5 ವಸತಿನಿಲಯಗಳ ದುರಸ್ತಿಗೆ ಅನುದಾನ ಬಿಡುಗಡೆಯಾಗಿದ್ದು ಅದು ಜಿಲ್ಲಾ ಹಂತದಲ್ಲಿದೆ, ಕೂಡಲೇ ಹಣ ಬಿಡುಗಡೆ ಮಾಡಿಸಬೇಕು ಎಂದು ಅಧಿಕಾರಿ ಉಮಾ ಶಾಸಕರ ಗಮನಕ್ಕೆ ತಂದರು.

ಸಭೆಯಲ್ಲಿ ತಹಶೀಲ್ದಾರ್ ಫಿರೋಜ್, ತಾಲ್ಲೂಕು ಪಂಚಾಯಿತಿ ಇಒ ರಾಘವೇಂದ್ರ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT