ಹರಪನಹಳ್ಳಿ: ‘ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಶೀಘ್ರ ನಿರ್ಧಾರ ಕೈಗೊಳ್ಳುವ ವಿಶ್ವಾಸ ಇದೆ.ಬಸವರಾಜ ಬೊಮ್ಮಯಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ’ ’ ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸೋಲು–ಗೆಲುವು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಪಟ್ಟಣದ ವಾಲ್ಮೀಕಿ ಸಮುದಾಯ ಭವನ ಅಪೂರ್ಣಗೊಂಡಿದ್ದು, ಶಾಸಕ ಕರುಣಾಕರರೆಡ್ಡಿ ಹಾಗೂ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿದ್ದು, ಶೀಘ್ರ ಅನುದಾನ ನೀಡಲಿದ್ದಾರೆ. ಕೋವಿಡ್ ಪರಿಣಾಮ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು.ಮಾರ್ಚ್ ಅಂತ್ಯದೊಳಗೆ ಸಾಕಷ್ಟು ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ’ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೊಳವೆಬಾವಿ, ವಾಹನಗಳಿಗೆ, ಮಹಿಳಾ ಸಂಘಗಳಿಗೆ ಹಾಗೂ ನೇರ ಸಾಲವನ್ನು ನೀಡಲಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. ಬಿಜೆಪಿ ಸರ್ಕಾರ ಜಗಳೂರು ಕ್ಷೇತ್ರದಲ್ಲಿ 57 ಕೆರೆಗಳಿಗೆ ನದಿ ನೀರು ತುಂಬಿಸುವ ಯೋಜನೆಗೆ₹ 660 ಕೋಟಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ₹ 1250 ಕೋಟಿ ಅನುದಾನ ನೀಡಿದೆ ಎಂದರು.