ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ಯಾರಂಟಿಗೆ ಪರಿಶಿಷ್ಟರ ಹಣ: ಬಿಜೆಪಿ ಆರೋಪ

Published 24 ಫೆಬ್ರುವರಿ 2024, 7:07 IST
Last Updated 24 ಫೆಬ್ರುವರಿ 2024, 7:07 IST
ಅಕ್ಷರ ಗಾತ್ರ

ದಾವಣಗೆರೆ: ‘ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ’ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

‘ಪರಿಶಿಷ್ಟರಿಗೆ ಮೀಸಲಿಟ್ಟಿದ ₹11,144 ಕೋಟಿ ಅನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ್ದು, ದಲಿತರ ಹಿತ ಬಲಿ ಕೊಟ್ಟು ಕಾಂಗ್ರೆಸ್ ತನ್ನ ಸ್ವಾರ್ಥ ಸಾಧನೆ ಪೂರೈಸಿಕೊಂಡು ಡೋಂಗಿ ದಲಿತ ಕಾಳಜಿ ಪ್ರದರ್ಶಿಸುತ್ತಿದೆ. ಪರಿಶಿಷ್ಟರ ಹಿತರಕ್ಷಣೆ ಮಾಡಬೇಕಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅನ್ಯಾಯದ ವಿರುದ್ಧ ಸೊಲ್ಲೆತ್ತದೆ ಕಾಂಗ್ರೆಸ್ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ. ಸಂವಿಧಾನ ಜಾಥಾ ಮಾಡುತ್ತಿರುವ ಸರ್ಕಾರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಬಸವರಾಜ ನಾಯ್ಕ ಆರೋಪಿಸಿದರು.

‘ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ₹10,000 ಕೋಟಿ ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿ ಯೋಜನೆಯೂ ಅಡ್ಡಿಯಾಗಿಲ್ಲ. ದಲಿತರ ಹಿತಾಸಕ್ತಿಗಿಂತ ಮತ ಬ್ಯಾಂಕ್ ರಾಜಕಾರಣ ಆದ್ಯತೆಯಾಗಿರುವುದು ಶೋಚನೀಯ ಸಂಗತಿ’ ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ದೂರಿದರು.

‘9 ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ಪರಿಶಿಷ್ಟರ ವಿಚಾರದಲ್ಲಿ  ಮಾತಿನಲ್ಲಿ ಮಾತ್ರ ಕಾಳಜಿ ತೋರಿ ವಂಚಿಸುತ್ತಿದೆ. ಪರಿಶಿಷ್ಟ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವೂ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ಅವರನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಯ ಸಲುವಾಗಿ ಸರ್ಕಾರ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಆರೋಪಿಸಿದರು.

ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್, ವಿಧಾನಪರಿಷತ್ ಮಾಜಿ ಮುಖ್ಯಸಚೇತಕ ಡಾ. ಶಿವಯೋಗಿಸ್ವಾಮಿ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಕೆ. ಪ್ರಸನ್ನಕುಮಾರ, ಧೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಜಿ.ಎಸ್‌. ಅನಿತ್‌ಕುಮಾರ್‌, ಐರಣಿ ಅಣ್ಣೇಶ್, ಧನಂಜಯ ಕಡ್ಲೆಬಾಳ್‌, ಅನಿಲ್ ಕುಮಾರ್ ನಾಯ್ಕ, ಎಸ್.ಟಿ. ವೀರೇಶ್, ವೀರೇಶ್ ಹನಗವಾಡಿ, ಬಾತಿ ವೀರೇಶ್, ಮುಂಜನಾಯಕ, ವಿಶ್ವಾಸ್ ಎಚ್.ಪಿ, ಶಿವನಗೌಡ ಪಾಟೀಲ್, ಹನುಮಂತ ನಾಯಕ, ಗಂಗಾಧರ ಜಿ.ವಿ., ಕೃಷ್ಣಪ್ಪ, ಪಿ.ಸಿ. ಶ್ರೀನಿವಾಸ್, ಬೇತೂರ್ ಸಂಗಪ್ಪ, ಕೊಟ್ರೇಶ್ ಗೌಡ, ಶ್ಯಾಮ್, ಪಿ.ಸಿ.ಶ್ರೀನಿವಾಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT