ದಾವಣಗೆರೆ:ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ತಂಬಾಕು ಮಾರಾಟಗಾರರಿಗೆ ಪ್ರತ್ಯೇಕ ಉದ್ಯಮ ಪರವಾನಗಿ ನೀಡಲು ತೀರ್ಮಾನಿಸಲಾಗಿದೆ.
ರಾಷ್ಟ್ರ ಹಾಗೂ ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಘಟಕ ಮತ್ತು ಬ್ಲೂಂಬರ್ಗ್ ಇನಿಷಿಯೇಟಿವ್ ಸಹಯೋಗದಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವೆಬಿನಾರ್ ಜೂಮ್ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.
ದಾವಣಗೆರೆ ಸೇರಿ ರಾಜ್ಯದ 10 ಮಹಾನಗರಪಾಲಿಕೆಗಳ ತಂಬಾಕು ಮಾರಾಟಗಾರರಿಗೆ ಮಹಾನಗರ ಪಾಲಿಕೆ ಕಾಯ್ದೆ-1976 ಅಡಿಯಲ್ಲಿ ಪ್ರತ್ಯೇಕ ವ್ಯಾಪಾರ ಪರವಾನಗಿ ನೀಡುವ ಮೂಲಕ ಕೋಟ್ಪಾ-2003ರ ಕಾಯ್ದೆಯನ್ನು ಅನುಷ್ಠಾನ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟುವ ಕುರಿತು ಚರ್ಚಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ‘ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು’ ಎಂದರು.
ಕೋವಿಡ್–19 ಸಮಯದಲ್ಲಿ ಜಿಲ್ಲೆಯಲ್ಲಿ ₹4,84,670 ದಂಡ ವಸೂಲಿ ಮಾಡಲಾಗಿದ್ದು, 2,615 ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 6ಬಿ ಶೈಕ್ಷಣಿಕ ಸಂಸ್ಥೆಗಳ ಆವರಣದ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುವುದು‘ ಎಂದು ಹೇಳಿದರು.
ಮಹಾನಗರಪಾಲಿಕೆಯ ಆರೋಗ್ಯ ಅಧಿಕಾರಿ ಡಾ. ಸುರೇಂದ್ರ, ‘ತಂಬಾಕು ಉತ್ಪನ್ನ ಲಭ್ಯತೆ ಕಡಿಮೆಯಾಗುವವರೆಗೂ ತಂಬಾಕು ನಿಯಂತ್ರಣ ಅಸಾಧ್ಯ. ಕೊರೊನಾ ಸಂದರ್ಭ ಇದಾಗಿದ್ದು, ವಾಹನ ಸವಾರರು ಗುಟ್ಕಾ ಎಲ್ಲೆಂದರಲ್ಲಿ ಉಗಿಯುತ್ತಾರೆ. ಆದ್ದರಿಂದ ಚಿವಿಂಗ್ ಹಾಗೂ ಸ್ಮೋಕಿಂಗ್ ಜೋನ್ ನಿರ್ಮಿಸಬೇಕು‘ ಸಲಹೆ ನೀಡಿದರು.
ಸಭೆಯಲ್ಲಿ ನಗರ ಉಪವಿಭಾಗದ ಡಿವೈಎಸ್ಪಿ ನಾಗರಾಜ್ ಐತಾಳ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ. ರಾಘವನ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅಶೋಕ್ ಕುಮಾರ್, ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರೇಶ್, ಬೆಂಗಳೂರಿನ ವಿಭಾಗೀಯ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುರೇಶ್ ಬಾರ್ಕಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎಂ.ವಿ.ಹೊರಕೇರಿ, ಹಿರಿಯ ಆರೋಗ್ಯ ಸಹಾಯಕರಾದ ಲೋಕೇಶ್ ಮತ್ತು ವೆಂಕಟಾಚಲ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್ ಮತ್ತು ದೇವರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.