ಹರಿಹರ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಮಂಜೂರಾತಿ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸ್ವಾಗತಿಸಿದ್ದಾರೆ.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಹಾಗೂ ಎಸ್ಟಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಕಲ್ಯಾಣ ಸಚಿವಾಲಯ ರಚನೆಗೆ ರಾಜ್ಯದ ಪರಿಶಿಷ್ಟ ಪಂಗಡದವರ ಬಹು ವರ್ಷದ ಬೇಡಿಕೆಯಾಗಿತ್ತು. ಸಮಾಜದ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಂಜೂರಾತಿ ನೀಡಲಾಗಿದೆ. ಈ ಹಿಂದೆ ವಾಲ್ಮೀಕಿ ಗುರುಪೀಠದಲ್ಲಿ ನಡೆದ 2ನೇ ವಾಲ್ಮೀಕಿ ಜಾತ್ರೆಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಭರವಸೆ ನೀಡಿದ್ದರು ಎಂದು ಶ್ರೀಗಳು ಸ್ಮರಿಸಿದ್ದಾರೆ.
ಸಮಾಜದ ಬೇಡಿಕೆ ಈಡೇರಿಕೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಪುಟದ ಸದಸ್ಯರು, ಸಚಿವ ಶ್ರೀರಾಮುಲು ಸೇರಿ ಸಮುದಾಯದ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಸಮುದಾಯದ ಪ್ರಮುಖ ಬೇಡಿಕೆಯಾದ ಶೇ 7.5 ಮೀಸಲಾತಿಯನ್ನೂ ಜಾರಿಗೊಳಿಸಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.